


ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಸಾಗಣೆ ಪ್ರಕರಣದಲ್ಲಿ ಒಡಿಶಾ ಮೂಲದ ಪೂರೈಕೆದಾರ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ದಿನಾಂಕ 19-01-2026ರಂದು ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು ₹53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು.

ಪ್ರಕರಣದ ಮುಂದುವರೆದ ತನಿಖೆಯಲ್ಲಿ ಆರೋಪಿಗಳಿಗೆ ಹಣಕಾಸು ಹಾಗೂ ವಾಹನ ವ್ಯವಸ್ಥೆ ಮಾಡುತ್ತಿದ್ದವರ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.ತನಿಖೆ ವೇಳೆ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ಬಂಧಿಸಲಾಗಿದೆ. ಇವರು ಗಾಂಜಾ ಸಾಗಾಣಿಕೆಗೆ ಅಗತ್ಯ ನೆರವು ನೀಡಿದ್ದರೆಂದು ಪೊಲೀಸ್ ಮೂಲಗಳು ತಿಳಿಸಿವೆ.ಇದಲ್ಲದೆ, ಆರೋಪಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಒಡಿಶಾ ರಾಜ್ಯದ ದೀಪಕ್ ಪಾತ್ರ (37) ಎಂಬಾತನನ್ನು ಬಂಧಿಸಲು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಅವರ ನೇತೃತ್ವದ ತನಿಖಾ ತಂಡ ಒಡಿಶಾಗೆ ತೆರಳಿ ಕಾರ್ಯಾಚರಣೆ ನಡೆಸಿತು. ಈ ವೇಳೆ ಆತನಿಂದ ₹80,000 ಮೌಲ್ಯದ 1 ಕೆ.ಜಿ 788 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ., ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ್ ಹಾಗೂ ದಿವ್ಯಾಪ್ರಕಾಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.








