





ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್ಕ್ಲಬ್ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್ನ ಮ್ಯಾನೇಜರ್ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್ ಮಾಲೀಕನ ವಿರುದ್ಧವೂ ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಹೀಗಾಗಿ ಪ್ರಧಾನ ವ್ಯವಸ್ಥಾಪಕನನ್ನು ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ವಾರಂಟ್ ಜಾರಿಗೊಳಿಸಲಾಗಿದೆ.
ಅರ್ಪೋರಾದ ನೈಟ್ ಕ್ಲಬ್ ಅಗ್ನಿ ಅವಘಡ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಡಾ. ಪ್ರಮೋದ್ ಸಾವಂತ್ ಆದೇಶಿಸಿದ್ದಾರೆ. ಈಗಾಗಲೇ ಜನರಲ್ ಮ್ಯಾನೇಜರ್ನನ್ನ ಬಂಧಿಸಿದ್ದು, ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಿ ವಾರಂಟ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕ್ಲಬ್ ಅಗ್ನಿ ಸುರಕ್ಷತಾ ಮಾನದಂಡಗಳನ್ನ ಪಾಲಿಸಿದೆಯೇ ಎಂಬುದನ್ನೂ ಕೂಡ ಪತ್ತೆ ಮಾಡಬೇಕಿದೆ. ಕ್ಲಬ್ ಯಾವ್ಯಾವ ಅನುಮತಿಗಳನ್ನ ಪಡೆದುಕೊಂಡಿದೆ, ಯಾರು ಅನುಮತಿ ಕೊಟ್ಟಿದ್ದಾರೆ ಎಲ್ಲವನ್ನೂ ಬಯಲಿಗೆಳೆಯಬೇಕು ಎಂದು ಸೂಚಿಸಿದ್ದಾರೆ.
ದುರಂತ ನೆನೆದು ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ. ಅಲ್ಲದೇ ಕೇಂದ್ರದಿಂದ ಪರಿಹಾರ ಸಹ ಘೋಷಣೆ ಮಾಡಿದ್ದು, ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ.








