ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಎ.9) ಪ್ರಕಟಗೊಂಡಿದೆ. ಈ ಸಂಬಂಧ ಇಲ್ಲಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಳೆದ ವರ್ಷಕ್ಕಿಂತ 12ರಷ್ಟು ಏರಿಕೆ ಕಂಡಿದೆ. ಕಲಾ ವಿಭಾಗದಲ್ಲಿ 72.86ರಷ್ಟು, ವಾಣಿಜ್ಯ ವಿಭಾಗದಲ್ಲಿ 88.04ರಷ್ಟು, ವಿಜ್ಞಾನ ವಿಭಾಗದಲ್ಲಿ 91.69ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ ಎಂದು ತಿಳಿಸಿದರು.2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು.

ಇದರೊಂದಿಗೆ ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದೆ.ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ.88.70ರಷ್ಟು ಬಾಲಕಿಯರು ಪಾಸಾಗಿದ್ದರೆ, ಶೇಕಡಾ 83.65 ಬಾಲಕರು ಪಾಸಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಪ್ರಿನ್ಸಿಲಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದು, ಅಭಿರಾಮ್, ಆಂಜೆಲ್ ತಿವಾರಿ, ಅಂಕಿತ್, ಧನುಷ್ ಸಹಿತ 12 ಮಂದಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಅರ್ಚನಾ ಡಿಎಂ, ಸಂಗೀತಾ, ಶ್ರುತಿ ಪ್ರಥಮ ಸ್ಥಾನ ಪಡೆದಿದ್ದು, ಫಾತಿಮತ್ ಸಹ್ಯಾ ಮುಹಮ್ಮದ್ ನದಾಫ್, ಸನಿಕಾ, ಶಿವಾನಂದ್, ಶ್ರಾವಣಿ ಪಾಟೀಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅದಿತಿ, ದಿಶಾ ಪ್ರಥಮ ಸ್ಥಾನ ಪಡೆದಿದ್ದು, ದ್ವನಿ, ರೇಚೆಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಆಲಿನ್ ಲಿಂಕ್ ಮೂಲಕ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್, ಎಸ್ಸೆಮ್ಮೆಸ್ ಮೂಲಕವೂ ಫಲಿತಾಂಶವನ್ನು ರವಾನಿಸಲಾಗಿದೆ.ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ 7,10,363 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದರು.








