ಮೈಸೂರು: ಚುನಾವಣಾ ವ್ಯವಸ್ಥೆ ಹದಗೆಟ್ಟಿರುವುದರಿಂದ ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ನಡೆದ ಹಿರಿಯ ರಾಜಕಾರಣಿ ವಿ.ಎಸ್. ವೀರಣ್ಣ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿಲ್ಲ. ಬದಲಾಗಿ ಇಂದಿನ ಚುನಾವಣಾ ವ್ಯವಸ್ಥೆ ಹಾಗೂ ಚುನಾವಣೆಯಲ್ಲಿ ನಡೆಯುತ್ತಿರುವ ಹಣದ ಹೊಳೆ ಕಾರಣದಿಂದ ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.ಇನ್ನು ಲೋಕಸಭೆಗೂ, ವಿಧಾನಸಭೆಗೂ ಸ್ಪರ್ಧಿಸುವುದಿಲ್ಲ. ಆದರೆ ಚುನಾವಣಾ ರಾಜಕೀಯದಿಂದ ದೂರವಾದರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಹೇಳಿದರು.ತಮಗೆ ಸಂಸತ್ಗೆ ಸ್ಪರ್ಧಿಸುವಂತೆ ಆಫರ್ ಬಂದಿತ್ತು. ಆದರೆ ಅದನ್ನು ತಿರಸ್ಕರಿಸಿದ್ದೇನೆ. 1991ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧಿಸಿ ಸೋತ ಬಳಿಕವೇ ಇನ್ನು ಮುಂದೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬಾರದು ಎಂದು ನಿರ್ಧರಿಸಿದ್ದೆ ಎಂದು ಅವರು ತಿಳಿಸಿದರು.
ಚುನಾವಣಾ ವ್ಯವಸ್ಥೆ ಬಗ್ಗೆ ಅಸಮಾಧಾನ
1983ರ ಚುನಾವಣಾ ವ್ಯವಸ್ಥೆಗೂ 2023ರ ಚುನಾವಣಾ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಚುನಾವಣಾ ಆಯೋಗ ನಿಗದಿಪಡಿಸಿರುವ ಮಿತಿಯೊಳಗೇ ಅಭ್ಯರ್ಥಿಗಳು ಹಣ ಖರ್ಚು ಮಾಡುವಂತಾಗಬೇಕು. ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ಅಕ್ರಮ ಹಣದ ಹರಿವಿಗೆ ಕಡಿವಾಣ ಹಾಕದಿದ್ದರೆ ಪ್ರಾಮಾಣಿಕವಾಗಿ ರಾಜಕಾರಣ ಮಾಡುವುದು ಕಷ್ಟ ಎಂದು ಅವರು ಹೇಳಿದರು.








