



ಹೊಸದಿಲ್ಲಿ: ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ಪ್ರಾಧಿಕಾರದ ನಿರ್ದೇಶನಗಳನ್ನು ಪಾಲಿಸುವಂತೆ ಕರ್ನಾಟಕ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವುದಾಗಿ ಕರ್ನಾಟಕ ಸರಕಾರ ಸೋಮವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕಾವೇರಿ ನೀರಿನ ಹಂಚಿಕೆ ವಿವಾದದ ವಿಚಾರಣೆ ನಡೆಸಿದ ನ್ಯಾಯಪೀಠದ ಮುಂದೆ ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್, ‘ನಮಗೆ ತುಂಬಾ ಕಷ್ಟವಾದರೂ CWMA ನಿರ್ದೇಶನದಂತೆ 12,000 ಕ್ಯೂಸೆಕ್ ನೀರು ಇರುವಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ಹೇಳಿದರು.
ಮೊದಲ ನಾಲೈದು ದಿನಗಳಲ್ಲಿ ಬಿಡುಗಡೆಯಾದ ನೀರಿನ ಪ್ರಮಾಣ 6,000 ಕ್ಯೂಸೆಕ್ಗೆ ಇಳಿದಿತ್ತು. ಆದರೆ ಮುಂದಿನ ದಿನಗಳಲ್ಲಿ ಈ ಕೊರತೆಯನ್ನು ಸರಿದೂಗಿಸುವ ನಿರೀಕ್ಷೆಯಿದೆ ಎಂದು ಅವರು ನ್ಯಾಯಪೀಠಕ್ಕೆ ತಿಳಿಸಿದರು.ಕರ್ನಾಟಕದ ಹೇಳಿಕೆಯನ್ನು ದಾಖಲಿಸಿಕೊಂಡ ಸುಪ್ರೀಂ ಕೋರ್ಟ್, ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಪ್ರಮಾಣ ಹಾಗೂ ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿಯ ಕುರಿತು ವರದಿ ಸಲ್ಲಿಸುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶನ ನೀಡಿತು.ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 24ರ ಸೋಮವಾರಕ್ಕೆ ಮುಂದೂಡಿತು.








