
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಕುಖ್ಯಾತ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತಮಿಳುನಾಡಿನ ಕೊಯಂಬತ್ತೂರು ನಿವಾಸಿ ಜಯಕುಮಾರ್ ವಿ. (55) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಐದು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.ಜುಲೈ 8ರಂದು ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನಿಂದ ಕಬ್ಬಿಣದ ಸಲಾಕೆ, ಸ್ಕ್ರೂ ಡ್ರೈವರ್, ಒಂದು ಬ್ಯಾಗ್ ಹಾಗೂ ಎರಡು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಚಾರಣೆ ವೇಳೆ, ದಕ್ಷಿಣ ಕನ್ನಡ ಜಿಲ್ಲೆಯ ಐದು ಪ್ರಕರಣಗಳ ಹೊರತಾಗಿ ಮಂಗಳೂರು ಸುರತ್ಕಲ್ ಪೊಲೀಸ್ ಠಾಣೆಯ ಒಂದು ಪ್ರಕರಣ, ಕೇರಳದ ನಾಲ್ಕು ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣ ಹಾಗೂ ಬೆಂಗಳೂರಿನ ಒಂದು ಪ್ರಕರಣ ಸೇರಿದಂತೆ ಒಟ್ಟು 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಈ ಕೆಳಗಿನ ಎಲ್ಲಾ ಪ್ರಕರಣಗಳಲ್ಲೂ ಆರೋಪಿತನು ನಗದು ಹಣವನ್ನು ಕಳವುಗೈದಿದ್ದು, ದೂರುದಾರರು ನೀಡಿದ ದೂರಿನ ಅನ್ವಯ ಅವುಗಳ ಮೊತ್ತ ಈ ಕೆಳಗಿನಂತಿವೆ.ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ 58/2026 – ರೂ 1,58,000/-ಅ.ಕ್ರ 59/2026 – ರೂ 15,000/-ಅ.ಕ್ರ 64/2026 ರೂ 98460/- ಉಪ್ಪಿನಂಗಡಿ ಠಾಣೆಅಕ್ರ:78/2026 – 16,500/-ಅಕ್ರ:79/2026 – 55,000/-ಆರೋಪಿತನು ಕಳವುಗೈದ ನಗದನ್ನು ಸ್ವಾಧೀನಪಡಿಸಲು ಬಾಕಿಯಿರುತ್ತದೆ.

ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನಾಗರಾಜ್ ನೇತೃತ್ವದ ವಿಶೇಷ ತನಿಖಾ ತಂಡ ಯಶಸ್ವಿಯಾಗಿ ನಡೆಸಿದೆ. ತನಿಖೆಯಲ್ಲಿ ಬೆಳ್ತಂಗಡಿ, ಉಪ್ಪಿನಂಗಡಿ, ಕಡಬ ಪೊಲೀಸ್ ಠಾಣೆಗಳ ಸಿಬ್ಬಂದಿ ಹಾಗೂ ಸಿಡಿಆರ್ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.








