ರಾಯಚೂರು, ಕೊಪ್ಪಳ ಅಭ್ಯರ್ಥಿಗಳು ಹೊಸ ಪ್ರವೇಶ ಪತ್ರ ಡೌನ್ಲೋಡ್ ಕಡ್ಡಾಯ; ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಅರ್ಜಿ ಅವಧಿ ಆ.7ರವರೆಗೆ ವಿಸ್ತರಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯ ಮಧ್ಯಾಹ್ನದ ಅವಧಿಯ ಸಮಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬದಲಾವಣೆ ಮಾಡಿದೆ.ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆ ನೀಡಿದ್ದು, ಈ ಹಿಂದೆ ಮಧ್ಯಾಹ್ನ 2:30ಕ್ಕೆ ನಿಗದಿಯಾಗಿದ್ದ ಪರೀಕ್ಷೆ ಇದೀಗ ಸಂಜೆ 4 ಗಂಟೆಗೆ ಆರಂಭವಾಗಿ ಸಂಜೆ 5:30ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಬೆಳಗಿನ ಪರೀಕ್ಷಾ ಕೇಂದ್ರದಿಂದ ಮಧ್ಯಾಹ್ನದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಅಭ್ಯರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ಮನಗಂಡು, ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.ಆದರೆ ಬೆಳಗಿನ ಅವಧಿಯ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದ್ದು, ಅವುಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಇದೇ ವೇಳೆ, ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಬರೆಯುತ್ತಿರುವ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಎಲ್ಲಾ ಅಭ್ಯರ್ಥಿಗಳು ಹೊಸದಾಗಿ ಪ್ರವೇಶ ಪತ್ರ (Admit Card) ಡೌನ್ಲೋಡ್ ಮಾಡಿಕೊಳ್ಳುವುದು ಕಡ್ಡಾಯ ಎಂದು ಕೆಇಎ ಸೂಚಿಸಿದೆ. ಈಗಾಗಲೇ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿರುವ ಅಭ್ಯರ್ಥಿಗಳೂ ಹೊಸದಾಗಿ ಪ್ರವೇಶ ಪತ್ರ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿದೆ.
ಇನ್ನೊಂದೆಡೆ, ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 7ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಲು ಆಗಸ್ಟ್ 10 ಕೊನೆಯ ದಿನಾಂಕವಾಗಿರುತ್ತದೆ. ಜುಲೈ 10ರಂದು ಪ್ರಕಟಿಸಿದ ಅಧಿಸೂಚನೆಯ ಉಳಿದ ಎಲ್ಲಾ ನಿಯಮಗಳು ಯಥಾಸ್ಥಿತಿಯಲ್ಲೇ ಮುಂದುವರಿಯಲಿವೆ ಎಂದು ಕೆಇಎ ತಿಳಿಸಿದೆ.







