
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿತನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಳ್ಳಾಲದ ಮುಕ್ಕಚೇರಿ, ಕಿಲೇರಿಯಾ ನಗರದ ನಿವಾಸಿ ಅಶ್ವಾಕ್ (34) ಬಂಧಿತ ಆರೋಪಿತ. ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ಅಪರಾಧ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಗಲಾಟೆ, ಅಕ್ರಮ ಗುಂಪುಗೂಡುವಿಕೆ, ದಾರಿ ತಡೆ, ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ, ಬೆದರಿಕೆ ಹಾಗೂ ಕೊಲೆ ಯತ್ನ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.ಪ್ರಕರಣವು 2ನೇ ಜೆಎಂಎಫ್ಸಿ ನ್ಯಾಯಾಲಯದ ಸಿ.ಸಿ. ನಂ. 5442/2018ರಲ್ಲಿ ವಿಚಾರಣೆಯಲ್ಲಿದ್ದು, ಆರೋಪಿತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆತನ ವಿರುದ್ಧ ಎಲ್ಪಿಸಿ ವಾರೆಂಟ್ ಹೊರಡಿಸಿತ್ತು.
ವಾರೆಂಟ್ ಜಾರಿಗೊಳಿಸುವ ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಆರೋಪಿತನನ್ನು ಸೆ.8ರಂದು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.








