
ಬೆಂಗಳೂರು: ನಗರದ ಆರ್.ಆರ್. ನಗರದಲ್ಲಿ ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಸಣ್ಣ ಅಪಘಾತಕ್ಕೀಡಾದ ಘಟನೆ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ವದಂತಿಗಳು ಹರಿದಾಡುತ್ತಿದ್ದ ಹಿನ್ನೆಲೆ, ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸ್ಪಷ್ಟನೆ ನೀಡಿದ್ದಾರೆ.
ಅವರ ಪ್ರಕಾರ, ಅಪಘಾತ ಸಂಭವಿಸಿದ ವೇಳೆ ವಿನೀಶ್ ಕಾರು ಚಲಾಯಿಸುತ್ತಿರಲಿಲ್ಲ. ಕಾರನ್ನು ಚಾಲಕರೇ ಚಾಲನೆ ಮಾಡುತ್ತಿದ್ದರು. ಮುಂದೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.ಅಪಘಾತ ನಡೆದ ತಕ್ಷಣ ವಿನೀಶ್ ಸ್ಥಳದಲ್ಲೇ ಇಳಿದು ಗಾಯಾಳುಗಳಿಗೆ ನೆರವಾಗಲು ಮುಂದಾಗಿದ್ದರು. ಇದೇ ವೇಳೆ ಅಲ್ಲಿದ್ದ ಕೆಲವರು ವಿನೀಶ್ ಅವರ ಫೋಟೋಗಳನ್ನು ತೆಗೆದಿದ್ದು, ಆ ಚಿತ್ರಗಳ ಆಧಾರದ ಮೇಲೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ವಿಜಯಲಕ್ಷ್ಮಿ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಇಂತಹ ಸಣ್ಣಪುಟ್ಟ ರಸ್ತೆ ಅಪಘಾತಗಳು ಸಾಮಾನ್ಯ. ಈ ಘಟನೆಯನ್ನು ಅನಗತ್ಯವಾಗಿ ದೊಡ್ಡದಾಗಿ ಬಿಂಬಿಸಿ ನಮ್ಮ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡಬೇಡಿ,” ಎಂದು ಅವರು ಮನವಿ ಮಾಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಂತೆ ವಿಜಯಲಕ್ಷ್ಮಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.








