
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ತುಮಕೂರಿನ ಬಾರ್ ಮಾಲೀಕರೊಬ್ಬರಿಗೆ ಆರೋಪಿಗಳ ಪರವಾಗಿ ಸಾಕ್ಷಿ ಹೇಳುವಂತೆ ಬೆದರಿಕೆ ಹಾಕಿದ ಆರೋಪದಡಿ ಸುಹಾಸ್, ವೈಭವ್ ಹಾಗೂ ಪುನೀತ್ ಅವರನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ 59ನೇ ಸಿಸಿಎಚ್ ನ್ಯಾಯಾಲಯ ಮೂವರಿಗೂ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಅವರು ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಾಕ್ಷಿಗೆ ಬೆದರಿಕೆ ಹಾಕಿದ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯ ವೇಳೆ ಸಾಕ್ಷಿಗೆ ಆಮಿಷವೊಡ್ಡಿ, ಸುಳ್ಳು ಹೇಳುವಂತೆ ಒತ್ತಡ ಹೇರಿರುವ ಆರೋಪವೂ ಕೇಳಿಬಂದಿದೆ.ಪ್ರಕರಣದ ತನಿಖೆಯ ಪ್ರಕಾರ, ಸಾಕ್ಷಿ ಸಂದೀಪ್ ಅವರಿಗೆ ಕರೆ ಮಾಡಿ ಭೇಟಿ ಮಾಡುವಂತೆ ಹೇಳಿ, ಕಾರಿನಲ್ಲಿ ಕೂರಿಸಿಕೊಂಡು ನ್ಯಾಯಾಲಯದಲ್ಲಿ ನೀಡಬೇಕಾದ ಸಾಕ್ಷಿ ಕುರಿತು ಪ್ರಭಾವ ಬೀರುವ ಪ್ರಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಈ ಮಧ್ಯೆ, ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಮುಂದುವರಿದಿದೆ.








