ಸಾಗರ: ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತುಮರಿ ಸಮೀಪದ ಕಳೂರು ಹಿರಿಯ ಪ್ರಾಥಮಿಕ ಶಾಲೆಯ ಎದುರು ಪೋಷಕರು ಸೋಮವಾರ ಪ್ರತಿಭಟನೆ ನಡೆಸಿದರು.
ಶಾಲೆಗೆ ಬೀಗ ಹಾಕಿ ಬಂದ್ ಮಾಡಿ, ಮಕ್ಕಳೊಂದಿಗೆ ಶಾಲೆಯ ಮುಂಭಾಗದಲ್ಲಿ ಕುಳಿತು ಪೋಷಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
“ನಮಗೆ ಸರಿಯಾಗಿ ಪಾಠ ಹೇಳಲು ಶಿಕ್ಷಕರೇ ಇಲ್ಲ” ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು. ಈ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ.ಪಿ. ಓಂಕಾರ ಜೈನ್, ಡಾಕಪ್ಪ, ನಾಗರಾಜ್, ಲೋಕಪಾಲ್ ಜೈನ್ ಸೇರಿದಂತೆ ಪೋಷಕರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಬಳಿಕ ಶಿಕ್ಷಣಾಧಿಕಾರಿ ದಿನೇಶ್ ಸ್ಥಳಕ್ಕೆ ಭೇಟಿ ನೀಡಿ ಪೋಷಕರ ಮನವಿ ಸ್ವೀಕರಿಸಿದರು.








