
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಸುಮಾರು ₹7.60 ಲಕ್ಷ ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ 27 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಜುಲೈ 29ರ ರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಆನಂದ ಎಂ ಹಾಗೂ ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ, KA18 A 7203 ಸಂಖ್ಯೆಯ ಆಟೋ ರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ತಪಾಸಣೆ ನಡೆಸಿದರು. ವಿಚಾರಣೆಯಲ್ಲಿ ಆತ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನೆ ಅನ್ಸರ್ (21) ಎಂದು ಗುರುತಿಸಲಾಯಿತು.ಆತನ ಬಳಿ 27 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ಪತ್ತೆಯಾಯಿತು. ಬಳಿಕ ಸ್ಥಳದಲ್ಲಿದ್ದ ಆಟೋ ರಿಕ್ಷಾ ಮತ್ತು ಕಾರನ್ನು ಪರಿಶೀಲಿಸಿದಾಗ, ಸುಮಾರು ₹7.60 ಲಕ್ಷ ಮೌಲ್ಯದ 76.59 ಗ್ರಾಂ ಎಂಡಿಎಂಎ ಪತ್ತೆಯಾಗಿದೆ.ಪ್ರಾಥಮಿಕ ವಿಚಾರಣೆಯಲ್ಲಿ, ಮಾದಕ ವಸ್ತು ನೀಡಲು ಬಂದ ಅಮ್ಜತ್ ಖರಾರ್ ಎಂಬಾತ KA21 MA 4990 ಸಂಖ್ಯೆಯ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 82/2026ರಡಿ ಎನ್ಡಿಪಿಎಸ್ ಕಾಯ್ದೆಯ ವಿವಿಧ ಕಲಂಗಳ ಅನ್ವಯ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.








