
ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.3ರಂದು ಬೆಳಗ್ಗೆ ಕಡಬದ ಕುಂಡಡ್ಕ ಪಾಲ್ಸ್ಗೆ ದೂರುದಾರ ಬಾಲಕ ತನ್ನ ನಾಲ್ವರು ಸಹಪಾಠಿಗಳೊಂದಿಗೆ ತೆರಳಿ ಆಟವಾಡುತ್ತಿದ್ದ ವೇಳೆ, ಆರೋಪಿಗಳಾದ ರೋಹಿತ್, ದೇವಿಪ್ರಸಾದ್, ಚಂದನ್ ಹಾಗೂ ಉಮೇಶ್ ಮತ್ತು ವಿದ್ಯಾರ್ಥಿಗಳೊಂದಿಗೆ ಇದ್ದ ವಿದ್ಯಾರ್ಥಿನಿಯ ತಂದೆ ಸ್ಥಳಕ್ಕೆ ಬಂದಿದ್ದಾರೆ ಎನ್ನಲಾಗಿದೆ.ಈ ವೇಳೆ ಆರೋಪಿಗಳು ಬಾಲಕನಿಗೆ ಅವಾಚ್ಯವಾಗಿ ಬೈದು, ಆತನಿಗೆ ಹಾಗೂ ಇಬ್ಬರು ಸಹಪಾಠಿ ಬಾಲಕರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಆ.11ರಂದು ದೂರು ನೀಡಲಾಗಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








