
ವಿಟ್ಲ: ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ 17 ವರ್ಷ ವಯೋಮಿತಿಯೊಳಗಿನ ಬಾಲಕ–ಬಾಲಕಿಯರ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ–2026 ಸೆ.1ರಂದು ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲದಲ್ಲಿ ನಡೆಯಿತು.ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಶಾಲಾ ಸಂಚಾಲಕರಾದ ವಂದನೀಯ ಫಾ. ಮೈಕಲ್ ಲೋಬೊ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ನಾರಾಯಣ ಹೆಬ್ಬಾರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಆಶಾ ನಾಯಕ್, ಕ್ಲಸ್ಟರ್ ಮಟ್ಟದ ನೋಡಲ್ ಅಧಿಕಾರಿ ಅಶೋಕ್ ಭಟ್, ಪ್ರೇಮನಾಥ್ ಶೆಟ್ಟಿ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಎಡಪದವಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಭಾರ ಎತ್ತುವ ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ತರಬೇತುದಾರ ಪ್ರಮೋದ್ ಕುಮಾರ್ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ. ಅಮಿತ್ ಪ್ರಕಾಶ್ ರೋಡ್ರಿಗಸ್ ಅತಿಥಿಗಳನ್ನು ಸ್ವಾಗತಿಸಿ ಗೌರವಿಸಿದರು. ವಿಷ್ಣು ನಾರಾಯಣ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆಯ ಆದೇಶ ಹಾಗೂ ಸ್ಪರ್ಧೆಯ ನಿಯಮಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಶ್ರೀ ಸತ್ಯ ಸಾಯಿ ಲೋಕಸೇವಾ ಅನುದಾನಿತ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ರಾಜೇಂದ್ರ ರೈ ಹಾಗೂ ಆರ್.ಎಂ.ಎಸ್.ಎ ವಿಟ್ಲದ ದೈಹಿಕ ಶಿಕ್ಷಕ ವಿದ್ಯಾಶಂಕರ್ ಡಿ. ಅವರನ್ನು ಸನ್ಮಾನಿಸಲಾಯಿತು. ಬಳಿಕ ಶಾಲಾ ಸಂಚಾಲಕರು ಶುಭ ಹಾರೈಸಿ, ವೇಟ್ಲಿಫ್ಟಿಂಗ್ ಬಾರ್ಬೆಲ್ ರೋಲ್ ಮಾಡುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.ಬೆಳಗ್ಗಿನಿಂದ ಸಂಜೆವರೆಗೆ ವಿವಿಧ ವಿಭಾಗಗಳಲ್ಲಿ ಬಾಲಕ–ಬಾಲಕಿಯರ ಸ್ಪರ್ಧೆಗಳು ನಡೆದವು. ಆತಿಥೇಯ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳೂ ಉತ್ತಮ ಸಾಧನೆ ಮಾಡಿದರು.
ಬಾಲಕರ 60 ಕೆ.ಜಿ. ವಿಭಾಗದಲ್ಲಿ ಗುರುಪ್ರೀತ್, 98 ಕೆ.ಜಿ. ವಿಭಾಗದಲ್ಲಿ ಬಿ. ವಿನೀತ್ ಕುಮಾರ್ ಹಾಗೂ ಬಾಲಕಿಯರ 77 ಕೆ.ಜಿ. ವಿಭಾಗದಲ್ಲಿ ಆಯಿಷತ್ ನೌಫೀದಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯ ಬಾಲಕರ ವಿಭಾಗದಲ್ಲಿ ರಾಮಕುಂಜ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಸುಳ್ಯಪದವು ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಸಂಸ್ಥೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.








