ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಅಂತಿಮ ತೀರ್ಪನ್ನು ನಾಳೆ (ಸೆ. 30)ರಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವು 27 ವರ್ಷಗಳ ನಂತರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.
ತೀರ್ಪು ಪ್ರಕಟಿಸುವ ಸಂದರ್ಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿರುವಂತೆ ನಿರ್ದೇಶಿಸಲಾಗಿದೆ. ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾ ಭಾರತಿ ಸೇರಿದಂತೆ 32 ಆರೋಪಿಗಳು ಕೋರ್ಟ್ಗೆ ಹಾಜರಾಗಲಿದ್ದಾರೆ.
ಸೆಪ್ಟೆಂಬರ್ 1ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 351 ಜನ ಸಾಕ್ಷಿಗಳು ಹಾಗೂ ಸುಮಾರು 600 ಸಾಕ್ಷ್ಯಚಿತ್ರಗಳ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಇವೆಲ್ಲವೂ 1992ರ ಡಿಸೆಂಬರ್ 6ರಂದು ಕರಸೇವಕರು ಅಯೋಧ್ಯೆಯ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ್ದರು ಎಂಬ ಬಗೆಗಿನ ಸಾಕ್ಷ್ಯಾಧಾರಗಳಾಗಿವೆ.