ವಿಟ್ಲ : ಕೆಲ ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನು ಮೇಲಕ್ಕೆತ್ತಿ ಸಾವಿನ ನಿಗೂಢತೆಯ ಬಗ್ಗೆ ಪೊಲೀಸರು ಮರು ತನಿಖೆ ನಡೆಸಲು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.
18 ದಿನಗಳ ಹಿಂದೆ ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಎಂಬವರು ತಮ್ಮ ವಾಸದ ಮನೆ ಸಮೀಪ ಗೂಡಂಗಡಿ ನಡೆಸುತ್ತಿದ್ದು, ಮೇ 5 ರಂದು ರಾತ್ರಿ ಗೂಡಂಗಡಿ ಮುಚ್ಚಿದ ಬಳಿಕ, ಅಹಾರ ಸೇವಿಸಿ ನಿದ್ರಿಸಿದ್ದರು. ಆದರೇ ಮರು ದಿನ ಬೆಳಗ್ಗೆ 6 ಗಂಟೆಗೆ ಅವರನ್ನು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿತ್ತು. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ಪತ್ನಿ ಇತರರಿಗೆ ಮಾಹಿತಿ ನೀಡಿದ್ದಳು. ಅಶ್ರಫ್ ಸಾವನ್ನಪ್ಪುವ ಸಂದರ್ಭ ಸಹೋದರ ಇಬ್ರಾಹಿಂ ಪುಣೆಯಲ್ಲಿದ್ದರು. ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಕನ್ಯಾನದ ಜುಮ್ಮಾ ಮಸೀದಿಯಲ್ಲಿ ಮೃತ ವ್ಯಕ್ತಿಯ ಶವವನ್ನು ದಫನ ನಡೆಸಲಾಗಿತ್ತು.
ಈ ಬಗ್ಗೆ ಸಾವಿನಲ್ಲಿ ನಿಗೂಢತೆ ಇರುವುದಾಗಿ ಸೂಚಿಸಿ ಇಬ್ರಾಹಿಂ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆ ಮಂಜೇಶ್ವರ ಹಾಗೂ ವಿಟ್ಲ ಠಾಣಾ ಪೊಲೀಸರು, ಧಪನಗೊಂಡ ದೇಹವನ್ನು ಮೇಲಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಿಗ್ಗೆ ಆಗಮಿಸಿದ್ದಾರೆ. ಮಂಗಳೂರಿನ ಯೆನೋಪಯ ಆಸ್ಪತ್ರೆಯ ಫಾರೆನ್ಸಿಕ್ ವಿಭಾಗದ ಸಿಬ್ಬಂದಿಗಳು, ಕಾಸರಗೋಡು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮರ ನೆರವು ನೀಡಲಿದ್ದಾರೆ. ಬಂಟ್ವಾಳ ತಹಶೀಲ್ದಾರ್ ಸ್ಥಳದಲ್ಲಿ ಉಪಸ್ಥಿತರಿದ್ದಾರೆ. ಸ್ಥಳದಲ್ಲಿ ಕುತೂಹಲಿಗಳು ಬೀಡು ಬಿಟ್ಟಿದ್ದಾರೆ.