


ಉಡುಪಿ: ಉದ್ಯಮಿಯೋರ್ವ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ಇದೀಗ ತನ್ನ ವಿರುದ್ಧ ಪೋಕ್ಸೋ ಕೇಸ್ ದಾಖಲಾಗುತ್ತಿದ್ದಂತೆಯೇ ಆರೋಪಿ ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ಉದ್ಯಮಿಯಾಗಿರುವ ಶ್ರೇಯಸ್ ನಾಯ್ಕ(25) ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ಈತ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದು, ತನ್ನ ಕೃತ್ಯವನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ಕಳೆದ ಒಂದು ವರ್ಷಗಳಿಂದ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಇಲ್ಲಿನ ಹಾಲಾಡಿ ರಸ್ತೆಯ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಮೇ 18ರಂದು ದೂರು ದಾಖಲಾಗಿದ್ದು, ದೂರು ದಾಖಲಾಗುತ್ತಿದಂತೆಯೇ ಶ್ರೇಯಸ್ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಶೋಧ ನಡೆಸಲಾಗುತ್ತಿದೆ.