Monday, June 30, 2025
spot_imgspot_img
spot_imgspot_img

ಕುಂದಾಪುರ: ಪತ್ನಿಯನ್ನು ಕಡಿದು ಕೊಲೆಗೆ ಯತ್ನಿಸಿದ ಆರೋಪಿ ಅರೆಸ್ಟ್..!

- Advertisement -
- Advertisement -

ಕುಂದಾಪುರ: ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸಾಹಸಕರವಾಗಿ ಬಂಧಿಸಿದ ಘಟನೆ ಕುಂದಾಪುರದ ಬಸ್ರೂರಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಲಕ್ಷ್ಮಣ (40) ಎಂದು ಗುರುತಿಸಲಾಗಿದೆ.

ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಬಳಿಕ ಆರೋಪಿಯು ಮನೆಯ ಒಳಗಿನಿಂದ ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದಾನೆ. ಅಡುಗೆ ಮನೆಯಲ್ಲಿ ಪತ್ನಿ ಅನಿತಾ (38) ರಕ್ತದ ಮಡುವಿನಲ್ಲಿ ಬಿದ್ದಿದ್ದರು. ವಿಷಯ ತಿಳಿದ ಸ್ಥಳೀಯರು ಅಡುಗೆ ಮನೆಯ ಕಿಟಕಿ ಬಾಗಿಲು ಒಡೆದು ಕೋಣೆಯ ಒಳಗೆ ತೆರಳಿ ಆಕೆಯನ್ನು ಹೊರಗೆ ಕರೆತಂದಿದ್ದಾರೆ. ಮಾರಣಾಂತಿಕ ಹಲ್ಲೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೊರಬ ಮೂಲದ ಈ ದಂಪತಿ ಬಸ್ರೂರಿನ ಕಾಶಿ ಮಠ, ರೆಸಿಡೆನ್ಶಿಯಲ್ ಬ್ಲಾಕ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಹಾಗೂ ಬಸ್ರೂರಿನ ಕಾಶಿ ಮಠದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ಯಾವುದೋ ವಿಚಾರಕ್ಕೆ ಇವರಿಬ್ಬರ ನಡುವೆ ನಡೆದ ಜಗಳವು ವಿಕೋಪಕ್ಕೆ ತಿರುಗಿದೆ. ಬಳಿಕ ಆರೋಪಿ ಪತಿಯು, ಪತ್ನಿ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಆಗಮಿಸಿದ ಕುಂದಾಪುರ (ಕಂಡ್ಲೂರು) ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿ ಶಾಮಕ ಸಿಬಂದಿ ಆರೋಪಿಯನ್ನು ಹಿಡಿಯಲು ಹರಸಾಹಸ ಪಡಬೇಕಾಯಿತು. ಆರೋಪಿಯು ಕೈಯಲ್ಲಿ ಕತ್ತಿ ಹಿಡಿದು ಹೆದರಿಸುತ್ತಿದ್ದುದರಿಂದ ಎದುರಿನ ಬಾಗಿಲು ಮುರಿದು ಒಳಗೆ ಹೋಗಲು ಸಾಧ್ಯವಾಗಲಿಲ್ಲ. ಬಳಿಕ ಪೊಲೀಸರು ಆತನಿದ್ದ ರೂಮಿನ ಕಿಟಕಿ ಮೂಲಕ ಖಾರದ ಪುಡಿ ಎರಚಿದ್ದು, ಅದರಿಂದ ಆತ ತಪ್ಪಿಸಿಕೊಂಡಿದ್ದಾನೆ. ಬಳಿಕ ಏರ್‌ಗನ್ ಮೂಲಕ ಗ್ಯಾಸ್ ಸಿಂಪಡಿಸಿದ್ದು, ಅದರಿಂದಲೂ ತಪ್ಪಿಸಿಕೊಂಡಿದ್ದಾನೆ.

ಬಳಿಕ ಪೊಲೀಸರು ಎದುರಿನ ಬಾಗಿಲನ್ನು ಒಡೆಯಲು ಪ್ರಯತ್ನಿಸುತ್ತಿರುವಂತೆ ಮಾಡಿ, ಮತ್ತೊಂದು ತಂಡ ಕಿಟಕಿ ಮೂಲಕ ಮನೆ ಒಳಗೆ ಪ್ರವೇಶಿಸಿದೆ. ಸತತ ಒಂದುವರೆ ಗಂಟೆಗಳ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!