


ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಸೆರೆ ಹಿಡಿದಿದ್ದಾರೆ.
ಕಾಸರಗೋಡು ಜಿಲ್ಲೆ ಮಂಜೇಶ್ವರ ಪುಚ್ಚಿತ್ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೇ ಸಲಾಂ(30) ಮತ್ತು ಸೂರಜ್ ರೈ ಯಾನೇ ಅಂಕಿ(26) ಬಂಧಿತರು.
ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ತಲಪಾಡಿ ಕೆ ಸಿ ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ 75,000 ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಒಟ್ಟು 1,65,000 ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳ ಪೈಕಿ ಅಬ್ದುಲ್ ಸಲಾಂ ವಿರುದ್ಧ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಾಗೂ ಸೂರಜ್ ರೈ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ. ಪಿಎಸ್ಐ ನರೇಂದ್ರ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.