



ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ನಿಲ್ಲಿಸುವಂತೆ ಆಗ್ರಹಿಸಿ ಹಿಂದು ಹಿತರಕ್ಷಣಾ ಸಮಿತಿ ಮಂಗಳೂರು ವತಿಯಿಂದ ಡಿ.4ರಂದು ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಯಲಿದೆ.
ಡಿ.4ರಂದು ಬೆಳಗ್ಗೆ 10ಕ್ಕೆ ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ಮಿನಿ ವಿಧಾನಸೌಧ ಮುಂಭಾಗ ನಡೆಯುವ ಪ್ರತಿಭಟನಾ ಸಭೆಯಲ್ಲಿ ಜಿಲ್ಲೆಯ ಮಠಾಧೀಶರು, ಧಾರ್ಮಿಕ ಮುಖಂಡರು, ಬಿಜೆಪಿಯ ಸಂಸದರು, ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಾಂಗ್ಲಾದಲ್ಲಿ ಹಿಂದುಗಳ ಪರವಾಗಿ ಹೋರಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ಇಸ್ಕಾನ್ನ ಚಿನ್ಮಯ್ ಕೃಷ್ಣದಾಸ್ ಪ್ರಭು ಅವರನ್ನು ಬಂಧಿಸಿರುವುದು ಖಂಡನೀಯ. ಬಾಂಗ್ಲಾದ ಅಭಿವೃದ್ಧಿಗೆ ಭಾರತ ಸಹಕಾರ ನೀಡಿದೆ. ಕೋವಿಡ್ ಅವಧಿಯಲ್ಲೂ ನರೇಂದ್ರ ಮೋದಿ ಸರ್ಕಾರ ಬಾಂಗ್ಲಾದೇಶಕ್ಕೆ ನೆರವಾಗಿತ್ತು. ಆದರೆ ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಬಾಂಗ್ಲಾದಲ್ಲಿ ಮತೀಯವಾದದ ಆಧಾರದಲ್ಲಿ ಹಿಂದುಗಳ ಮೇಲೆ ವ್ಯಾಪಕ ದಾಳಿ ನಡೆಯುತ್ತಿದೆ. ಬಾಂಗ್ಲಾದ ಮಹಮ್ಮದ್ ಯೂನಸ್ ಸರ್ಕಾರ ಹಿಂಸಾಕೋರರ ಪರ ಹೇಳಿಕೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಾಂಗ್ಲಾ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ಪಕ್ಷದ ಕೇಂದ್ರ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಪಕ್ಷದ ಸಂಘಟನಾತ್ಮಕ ಕೆಲಸಗಳು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಮರ್ಥವಾಗಿ ನಡೆಯುತ್ತಿವೆ ಎಂದು ಅವರು ಹೇಳಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ, ಕೋಶಾಧಿಕಾರಿ ಸಂಜಯ ಪ್ರಭು, ವಕ್ತಾರ ಅರುಣ್ ಶೇಟ್ ಉಪಸ್ಥಿತರಿದ್ದರು.*ಯುವ ಮೋರ್ಚಾ ಮನವಿಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿರಿಸಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯನ್ನು ಯಶಸ್ವಿಗೊಳಿಸುವಂತೆ ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ ಅವರು ಮನವಿ ಮಾಡಿದ್ದಾರೆ.








