

ಕುಂದಾಪುರ: ಕಾರಿನಲ್ಲಿ ಬಂದು ಜಾನುವಾರು ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಓರ್ವನನ್ನು ಬಂಧಿಸಸಿದ ಘಟನೆ ಬೀಜಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಸುರತ್ಕಲ್ ಮೂಲದ ಅಶ್ರಫ್(40) ಎಂದು ಗುರುತಿಸಲಾಗಿದೆ.
ಜ.5ರಂದು ಬೆಳಗ್ಗಿನ ಜಾವ ಕಾರಿನಲ್ಲಿ ಬಂದು ಜಾನುವಾರು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸಿ ಆತನಿಂದ 1.30 ಲಕ್ಷ ರೂ. ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದಿಬ್ಬರು ಆರೋಪಿ ಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕುಂದಾಪುರದ ಅಂಕದಕಟ್ಟೆಯಲ್ಲಿ ಕಾರ್ಯಚರಿಸುವ ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಸಿಸಿಟಿವಿ ಲೈವ್ ಮಾನಿಟರಿಂಗ್ ಸಿಬ್ಬಂದಿ, ರಾತ್ರಿ ದೃಶ್ಯಾವಳಿಗಳನ್ನು ನೇರವಾಗಿ ವೀಕ್ಷಣೆ ಮಾಡುತ್ತಿದ್ದ ವೇಳೆ ಕಾರಿನಲ್ಲಿ ಬಂದು ಗೋ ಕಳವಿಗೆ ಯತ್ನಿಸುತ್ತಿರುವುದು ಕಂಡುಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರಂತೆ ಪೊಲೀಸರು ಹಾಗೂ ಸಾರ್ವಜನಿಕರು ಬರುವುದನ್ನು ಅರಿತ ಕಳ್ಳರು ಜಾನುವಾರು ಬಿಟ್ಟು ಕಾರಿನಲ್ಲಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.