




ಮಂಗಳೂರು : ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನ (ಜಿಐಎಮ್- ಇನ್ವೆಸ್ಟ್ಮೆಂಟ್ ಕರ್ನಾಟಕ 2025) ಆರಂಭಗೊಂಡಿದ್ದು, ಈ ಬಾರಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಸಂಸದ ಬ್ರಿಜೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕರ್ನಾಟಕದ ಆರ್ಥಿಕ ಸುಸ್ಥಿರ ಬೆಳವಣಿಗೆಗೆ ಪೂರಕವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸುತ್ತಿರುವುದಕ್ಕೆ ಮುಖ್ಯಮಂತ್ರಿಗಳನ್ನು ಅಭಿನಂದಿಸಿರುವ ಚೌಟ, ಹೆಚ್ಚಿನ ಉದ್ಯಮಶೀಲತಾ ಕೌಶಲ್ಯ ನುರಿತ ಮಾನವ ಸಂಪತ್ತು ವಿಶ್ವದರ್ಜೆ ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಕರಾವಳಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಹೆಚ್ಚಿನ ಅವಕಾಶಗಳಿವೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮಬಂದರು ಸಂಪರ್ಕ, ಬಲಿಷ್ಠ ಮೂಲ ಸೌಕರ್ಯ ಹೊಂದಿರುವ ಕಾರಣ ಈ ಭಾಗದಲ್ಲಿ ಸಂಶೋಧನೆ ಅಭಿವೃದ್ಧಿ(ಆರ್ಡಿ), ಮಾಹಿತಿ ತಂತ್ರಜ್ಞಾನ, ನವೀಕರಿಸ ಬಹುದಾದ ಇಂಧನ, ಸಾಗರ ಜೈವಿಕ ತಂತ್ರಜ್ಞಾನ, ಪ್ರವಾಸೋದ್ಯಮ, ಆಹಾರ ಸಂಸ್ಕರಣೆ ಮತ್ತಿತರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಂಡವಾಳ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಆದರೆ, ಈ ಪ್ರದೇಶವು ಯುವಕರಲ್ಲಿ ನಿರುದ್ಯೋಗ ಸಮಸ್ಯೆ, ಕೌಶಲ್ಯಪೂರ್ಣ ಪ್ರತಿಭೆಗಳ ವಲಸೆ ಮತ್ತು ಸೀಮಿತ ದೊಡ್ಡ ಪ್ರಮಾಣದ ಕೈಗಾರಿಕಾ ಹೂಡಿಕೆಗಳು ಸೇರಿದಂತೆ ಕೆಲವೊಂದು ಸವಾಲು ಕೂಡ ಎದುರಿಸುತ್ತಿವೆ.ಹೀಗಿರುವಾಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಡವಾಳ ಹೂಡಿಕೆಗೆ ಲಭ್ಯವಿರುವ ಪರಿಸರ ಸ್ನೇಹಿ ವಾತಾವರಣ ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಈ ಬಾರಿಯ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಜಿಲ್ಲೆಗೆ ದೊಡ್ಡ ಪ್ರಮಾಣದ ಹೂಡಿಕೆ ಹರಿದು ಬರುವುದಕ್ಕೆ ಹೆಚ್ಚಿನ ಮುತುವರ್ಜಿ ವಹಿಸಬೇಕೆಂದು ಚೌಟ ಅವರು ಮನವಿ ಮಾಡಿದ್ದಾರೆ.








