


ಬೆಂಗಳೂರು: ಸರ ಕಳ್ಳತನವನ್ನೇ ವೃತ್ತಿಯನ್ನಾಗಿಸಿಕೊಂಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಎಸಗಿ ಜೈಲು ಪಾಲಾಗಿದ್ದ ರಾಜ್ಯದ ಕುಖ್ಯಾತ ಸರಗಳ್ಳನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಚ್ಯುತ್ ಕುಮಾರ್ ಅಲಿಯಾಸ್ ಗಣಿ ಅಲಿಯಾಸ್ ವಿಶ್ವನಾಥ್ (40) ಎಂದು ಗುರುತಿಸಲಾಗಿದೆ.
ಬಂಧಿತನಿಂದ 52.89 ಲಕ್ಷ ರೂ ಮೌಲ್ಯದ 541 ಗ್ರಾಂ ಚಿನ್ನಾಭರಣ, 1 ದ್ವಿಚಕ್ರ ವಾಹನವನ್ನ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಸರ ಕಸಿದುಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಸುಮಾರು 18 ವರ್ಷಗಳಿಂದ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ವಿರುದ್ಧ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ 100ಕ್ಕೂ ಅಧಿಕ ಸರ ಕಳ್ಳತನ ಪ್ರಕರಣಗಳಿದ್ದು, ಸಾಕಷ್ಟು ಬಾರಿ ಜೈಲು ಪಾಲಾಗಿದ್ದ. ಇತ್ತೀಚಿಗೆ ಜೈಲಿನಲ್ಲಿ ಪರಿಚಯವಾಗಿದ್ದ ಮತ್ತೊಬ್ಬ ಆರೋಪಿ ಜತೆ ಸೇರಿ ಮೊದಲ ಬಾರಿ ಮನೆಗಳ್ಳತನಕ್ಕೆ ಮುಂದಾಗಿದ್ದ. ಬಳ್ಳಾರಿಯ ಮನೆಯೊಂದರಲ್ಲಿ ಅರ್ಧ ಕೆ. ಜಿ ಚಿನ್ನಾಭರಣ ದೋಚಿದ್ದ ಅಚ್ಯುತ್ ಕುಮಾರ್, ನಂತರ ಬೆಂಗಳೂರಿಗೆ ಬಂದು ಸರಗಳ್ಳತನ ಮಾಡಿದ್ದ.
ಕಳವು ಮಾಡಿದ್ದ ಚಿನ್ನಾಭರಣವನ್ನು ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಮಾರಾಟ ಮಾಡಿದ್ದ. ಮೂರೇ ತಾಸಿನ ಅವಧಿಯಲ್ಲಿ ಬೆಂಗಳೂರಿನ ಮೂರು ಠಾಣೆಗಳ ವ್ಯಾಪ್ತಿಯಲ್ಲಿ ಕೈಚಳಕ ತೋರಿಸಿ ಪರಾರಿಯಾಗಿದ್ದ. ಇತ್ತೀಚೆಗೆ ಠಾಣೆ ವ್ಯಾಪ್ತಿಯ ಹೊಸಕೆರೆ ಹಳ್ಳಿಯ ಡಿಸೋಜಾನಗರದಲ್ಲಿ ಬೈಕ್ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸರ ಕಳವು ಮಾಡಿದ್ದಾಗಿ ತಪ್ರೊಪ್ಪಿಕೊಂಡಿದ್ದಾನೆ. ಆರೋಪಿಗೆ 2018ರಲ್ಲಿ ಜ್ಞಾನಭಾರತಿ ಠಾಣೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು ಎಂದು ಪೊಲೀಸರು ಹೇಳಿದರು. ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








