


ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ 11 ದಿನಗಳ ಕಾಲ ನಡೆಯಲಿದ್ದು, ಇದೇ ವೇಳೆ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ನಿಯೋಗ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಏರ್ಶೋಗೆ ಮನವಿ ಸಲ್ಲಿಸಿತ್ತು. ರಾಜ್ಯ ಸರ್ಕಾರದ ಕೋರಿಕೆ ಬೆನ್ನಲ್ಲೇ ರಾಜನಾಥ್ ಸಿಂಗ್ ಮನವಿಗೆ ಒಪ್ಪಿಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭೇಟಿ ವೇಳೆ ಬೆಂಗಳೂರಿನ ಟನಲ್ ಯೋಜನೆ, ಲಿಂಕ್ ರೋಡ್ ಹಾಗೂ ಏರ್ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕ್ಕರ್ ರಸ್ತೆಗೆ ರಕ್ಷಣಾ ಇಲಾಖೆಗೆ ಜಾಗ ಕೇಳಲಾಗಿತ್ತು. ಇದಕ್ಕೂ ಸರ್ಕಾರ ಸ್ಪಂದಿಸಿದೆ ಹಾಗೂ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಅವಕಾಶ ಕೇಳಲಾಗಿದೆ ಎಂದರು.ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ರೂ. ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ, ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.