



ರಾಯಚೂರು: ಅನೇಕ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಬಿಹಾರ ಮೂಲದ ಮನೋಜ್ ಸದಾ ಎಂದು ತಿಳಿದು ಬಂದಿದೆ.
ಸಮೀಪದ ಯರಮರಸ್ ಕೈಗಾರಿಕಾ ವಲಯದ ಅಕ್ಕಿ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮನೋಜ್ ಸದಾ ವಿರುದ್ಧ ಕೊಲೆ, ಸುಲಿಗೆ, ಜೀವ ಬೆದರಿಕೆ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ಆರೋಪಿಯ ಪತ್ತೆಗೆ ಮುಂದಾಗಿದ್ದ ಬಿಹಾರದ ಖಗಾರಿಯಾ ಜಿಲ್ಲೆಯ ಅಲೌಲಿ ಪೊಲೀಸ್ ಠಾಣಾ ಪೊಲೀಸರು ಆಗಮಿಸಿ ರಾಯಚೂರು ಗ್ರಾಮೀಣ ಠಾಣೆಯ ಪೊಲೀಸರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಿಹಾರದಲ್ಲಿ ಹಲವಾರು ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮನೋಜ್ ಸದಾ ಶಂಕಿತ ನಕ್ಸಲ್ ಎಂಬ ಅನುಮಾನಗಳು ವ್ಯಕ್ತವಾಗಿದ್ದು, ತಲೆಮರೆಸಿಕೊಳ್ಳಲು ಬಿಹಾರದಿಂದ ಬಂದು ರಾಯಚೂರಿನ ಯರಮರಸ್ ಕೈಗಾರಿಕಾ ಪ್ರದೇಶದ ಅಕ್ಕಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.ಈ ಕುರಿತು ಆರೋಪಿಯ ಬೆನ್ನಟ್ಟಿದ ಬಿಹಾರ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಸ್ಥಳೀಯ ಜಿಲ್ಲಾ ನ್ಯಾಯಾಲಯದ ಎದುರು ಹಾಜರುಪಡಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.








