



ಬಂಟ್ವಾಳ: ಅಟೋ ಎಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡು ಕಡೂರು ರಾಷ್ಟ್ರೀಯ ಹೆದ್ದಾರಿಯ ಗಾಣದಪಡ್ಡು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಬೋಳಂತೂರು ನಿವಾಸಿ ಜಬ್ಬಾರ್ (33) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿರುವ ಜಬ್ಬಾರ್ ಅವರು ಗಾಣದಪಡ್ಡು ಶಿವಗಣೇಶ್ ಬ್ಯಾಟರಿ ಅಂಗಡಿಯ ಕಾರ್ಮಿಕನಾಗಿ, ಅಟೋ ಎಲೆಕ್ಟ್ರಿಕಲ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಇಂದು ಬೆಳಿಗ್ಗೆ ಗಾಣದಪಡ್ಡು ಹೆದ್ದಾರಿಯ ಬದಿಯಲ್ಲಿ ಕಾರೊಂದಕ್ಕೆ ಹಾರ್ನ್ ಅಳವಡಿಸುತ್ತಿದ್ದ ವೇಳೆ ವೇಣೂರು ಮೂಲದ ವ್ಯಕ್ತಿಯೊಬ್ಬರು ಬೇಜಬ್ದಾರಿಯಿಂದ ಕಾರನ್ನು ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಜಬ್ಬಾರ್ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.








