

ಬೆಳಗಾವಿ: ಬಾಕಿ ಉಳಿದಿರುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಲೇ ಬಿಡುಗಡೆ ಮಾಡಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.


ಶುಕ್ರವಾರ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ‘ಫೆಬ್ರವರಿ, ಮಾರ್ಚ್ ನಲ್ಲಿ ಗೃಹಲಕ್ಷ್ಮೀ ಹಣ ಸಂದಾಯ ಆಗಿಲ್ಲ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಹಣ ನೀಡಿದಿದ್ದರೆ ಅದನ್ನು ಕೂಡಲೇ ಕೊಡಿಸುವ ಕೆಲಸವನ್ನು ಸರಕಾರ ಮಾಡಲಿದೆ. ಆಗಸ್ಟ್ ತಿಂಗಳವರೆಗೆ ಹಣ ಪಾವತಿ ಮಾಡಲಾಗಿದೆ. ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನಕ್ಕೆ ಕೊಟ್ಟ ಉತ್ತರ ಸರಿಯಾಗಿಲ್ಲವೆಂಬುದು ಹಕ್ಕುಚ್ಯುತಿ ಆಗುವುದಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಹಣ ಸಂದಾಯ ಮಾಡುತ್ತೇವೆ ಎಂದು ನುಡಿದರು.

ಈ ಹಿಂದೆ ‘ವಿರೋಧ ಪಕ್ಷ ಇರುವುದೇ ಸುಳ್ಳು ಹೇಳುವುದಕ್ಕೆ’ ಎಂದು ಅಶೋಕ್ ಹೇಳಿದ್ದರು. ಸುಳ್ಳು ಹೇಳಲು ವಿಪಕ್ಷ ಇರುವುದಲ್ಲ. ನೀವು ಆಡುವ ಮಾತು ಸುಳ್ಳು ಎಂದು ಆಯಿತು. ನಾವು ಸುಳ್ಳು ಹೇಳುವುದಿಲ್ಲ. ಏನಾದರೂ ಹೆಚ್ಚು ಕಮ್ಮಿ ಹೇಳಿದರೆ ಸರಿಪಡಿಸುತ್ತೇನೆ ಎಂದು ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಗೆ ತಿರುಗೇಟು ನೀಡಿದರು.

‘ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಸಂಬಂಧ ಸಚಿವರು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸದಸ್ಯರು ಆರೋಪ ಮಾಡಿದ್ದಾರೆ. ಈ ಕುರಿತು ತಾನು ಸಚಿವರೊಂದಿಗೆ ಚರ್ಚಿಸಿ, ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು’
-ಯು.ಟಿ.ಖಾದರ್ ಸ್ಪೀಕರ್








