
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಡಿ.14ರಂದು ಸಂಜೆ ಕೊನೆಯುಸಿರೆಳೆದಿದ್ದಾರೆ.


94 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವಯಸ್ಸಾಗಿದ್ದು, ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಎನಿಸಿಕೊಂಡಿದ್ದರು. ಶಾಮನುರ ಶಿವಶಂಕರಪ್ಪ ಅವರು ಜೂನ್ 16, 1931 ರಂದು ದಾವಣಗೆರೆಯಲ್ಲಿ ಜನಿಸಿದ್ದ ಇವರು, ಸಾಮಾನ್ಯ ಕುಟುಂಬದಿಂದ ಬಂದು ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಹಲವು ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದ ಶಾಮನೂರು ಶಿವಶಂಕರಪ್ಪ ಅವರು ಆರು ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು, ಸಚಿವರೂ ಸಹ ಆಗಿದ್ದರು. ಅಲ್ಲದೇ ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ, ಅಖಿಲ ಭಾರತ ವೀರಶಿವ ಮಹಾಸಭೆಯ ಅಧ್ಯಕ್ಷ, ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆ ಹಾಗೂ ಬಾಪುಜಿ ಎಂಜಿನಿಯರಿಂಗ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು.

ತಮ್ಮ ನಾಯಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ದಾವಣಗೆರೆಯ ಎಂಸಿಸಿ ಎ ಬ್ಲಾಕ್ ನಲ್ಲಿರುವ ಶಾಮನೂರು ಶಿವಶಂಕರಪ್ಪನವರ ನಿವಾಸದತ್ತ ದೌಡಾಯಿಸುತ್ತಿದ್ದಾರೆ. ಇನ್ನು ಅಗಲಿದ ಹಿರಿಯ ನಾಯಕನಿಗೆ ಡಿಕೆ ಶಿವಕುಮಾರ್, ಎಚ್ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.








