



ಬಂಟ್ವಾಳ: ಕೇಪು ಗ್ರಾಮದ ಕೇಪು ಎಂಬಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.
ಡಿ. 21ರಂದು ಬೆಳಿಗ್ಗೆ ಮುರಳೀಧರ ರೈ ಅವರ ಬಾಬ್ತು ಗದ್ದೆಯಲ್ಲಿ ಹಲವರು ಗುಂಪುಗೂಡಿ ಹಿಂಸಾತ್ಮಕವಾಗಿ ಕೋಳಿ ಅಂಕ ಆಡುತ್ತಿದ್ದುದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕೋಳಿ ಅಂಕದ ಬಗ್ಗೆ ಕಾನೂನು ತಿಳುವಳಿಕೆ ನೀಡಿದರೂ ಸ್ಥಳದಲ್ಲಿದ್ದವರು ತೆರಳದೆ ಕೃತ್ಯವನ್ನು ಮುಂದುವರಿಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಸಂಜೀವ ಮಠಂದೂರು, ಮುರಳೀಧರ ರೈ, ಸತೀಶ ಕುಂಪಲ, ದಯಾನಂದ ಉಜಿರೆಮಾರು, ಹರಿಪ್ರಸಾದ್ ಯಾದವ್, ಅಶೋಕ ಶೆಟ್ಟಿ (ವಿಟ್ಲ), ರಾಜೇಶ್ ಬಾಳೆಕಲ್ಲು ಸೇರಿದಂತೆ ಕೆಲವರು ಈ ಕೃತ್ಯಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸಿದ್ದಾರೆ.
ಪೊಲೀಸರು 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳು ಹಾಗೂ ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ ಕತ್ತಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 191/2025 ಕಲಂ 189(2), 49, 221, 223, 190 BNS 2023 ಹಾಗೂ ಪ್ರಾಣಿಗಳ ಮೇಲಿನ ಕ್ರೂರತೆ ತಡೆ ಕಾಯ್ದೆ 3 ಮತ್ತು 11ರ ಅಡಿಯಲ್ಲಿ ಒಟ್ಟು 27 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ








