





ತುಮಕೂರು: ಸಂಪೂರ್ಣವಾಗಿ ಸುಟ್ಟು ಕರಕಲಾದ ಕಾರಿನೊಳಗೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಭೀಕರ ಘಟನೆ ತುಮಕೂರು ಜಿಲ್ಲೆಯ ಸಿರಾ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಘಟನೆ ಹೇಗೆ ಸಂಭವಿಸಿದೆ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಮುದ್ದರಂಗನಹಳ್ಳಿ ಹಾಗೂ ಮೇಲುಕುಂಟೆ ಸಂಪರ್ಕಿಸುವ ರಸ್ತೆ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರಿನೊಳಗೆ ಪತ್ತೆಯಾದ ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಮಂಜುನಾಥ್ ಎಂದು ಪೊಲೀಸ್ ಮೂಲಗಳು ಗುರುತಿಸಿವೆ.

ಅರಣ್ಯ ಪ್ರದೇಶದಲ್ಲಿ ನಿಂತಿದ್ದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿರುವುದನ್ನು ಗಮನಿಸಿದ ಸ್ಥಳೀಯರು, ಸಮೀಪ ತೆರಳಿ ನೋಡಿದಾಗ ಕಾರಿನೊಳಗೆ ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಕಂಡುಬಂದಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಕಾರಿಗೆ ಬೆಂಕಿ ಹೇಗೆ ತಗುಲಿತು? ಇದು ಅಪಘಾತವೇ, ಆತ್ಮಹತ್ಯೆಯೇ ಅಥವಾ ಅಪರಾಧ ಕೃತ್ಯವೇ? ಎಂಬ ಎಲ್ಲ ಆಯಾಮಗಳಿಂದ ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಘಟನೆಯಿಂದಾಗಿ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಿರಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.







