ನಿಟ್ಟೆ: ನಿಟ್ಟೆ ಪರಿಗಣೆತ ವಿಶ್ವವಿದ್ಯಾಲಯದ ಅಧೀನ ಸಂಸ್ಥೆಯಾದ ಡಾ. ಐ. ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು ಹಾಗೂ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ – 2025 ಮತ್ತು 1997–2000ನೇ ಇಸವಿಯ ಬೆಳ್ಳಿ ವರ್ಷದ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ಡಿ.27ರಂದು ನಿಟ್ಟೆ ಕಾಲೇಜಿನ ಸಂಭ್ರಮ ಹವಾನಿಯಂತ್ರಿತ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ವಿದ್ಯಾ ಸಂಕೀರ್ಣದ ನಿರ್ಮಾಣ, ನಿರ್ವಹಣೆ ಮತ್ತು ಅಭಿವೃದ್ಧಿ ನಿರ್ದೇಶಕರಾದ ಎ. ಯೋಗೀಶ್ ಹೆಗ್ಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿಟ್ಟೆ ಪರಿಗಣೆತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಎಂ. ಎಸ್. ಮೂಡಿತ್ತಾಯ, ನಿಟ್ಟೆ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ್ ಎನ್. ಚಿಪ್ಲೂಂಕರ್ ಹಾಗೂ ನಿಟ್ಟೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ಮತ್ತು ಹಳೆ ವಿದ್ಯಾರ್ಥಿಗಳ ಸಂಘಟನೆಗಳ ನಿರ್ದೇಶಕ ಪ್ರಸನ್ನ ಆರ್. ಕೈಲಾಜೆ ಉಪಸ್ಥಿತರಿದ್ದರು.
ಪೂರ್ವ ವಿದ್ಯಾರ್ಥಿನಿ ಅನುರಾಧಾ ಭಟ್ ಪ್ರಾರ್ಥನೆ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಬಿ.ಕೆ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಝಾಕ್ ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದರು.
ಮುಖ್ಯ ಅತಿಥಿ ಡಾ. ಎಂ. ಎಸ್. ಮೂಡಿತ್ತಾಯ ಮಾತನಾಡಿ, ತಾವು ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳಿಂದ ಪಡೆದ ಪ್ರೀತಿ ಮತ್ತು ಸಹಕಾರವೇ ಇಂದು ಉನ್ನತ ಹುದ್ದೆಯನ್ನು ಅಲಂಕರಿಸಲು ಕಾರಣವಾಗಿದೆ ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ಇನ್ನೋರ್ವ ಮುಖ್ಯ ಅತಿಥಿ ಡಾ. ನಿರಂಜನ್ ಎನ್. ಚಿಪ್ಲೂಂಕರ್, ಪೂರ್ವ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಪಡೆದ ಸಂಸ್ಥೆಯೊಂದಿಗೆ ನಿಕಟ ಸಂಬಂಧ ಕಾಯ್ದುಕೊಂಡು ಸಂಸ್ಥೆಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಆರಂಭದಿಂದಲೇ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಹಾಗೂ ಸಹಾಯಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಗೌರವಿಸಲಾಯಿತು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಸಮಾರಂಭದ ನಂತರ ಹಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸ್ನೇಹ ಮಿಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಿವಿಧ ಮನೋರಂಜನಾ ಕ್ರೀಡೆಗಳು ನಡೆಯಿತು. ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸತೀಶ್ ಶೆಟ್ಟಿ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿನಿ ದೇಚಮ್ಮ ಎಂ. ಎ. ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಯನ್ನು ಹಳೆ ವಿದ್ಯಾರ್ಥಿನಿ ಪ್ರಸುಧಾ ಶೆಟ್ಟಿ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕಿ ಅರ್ಚನಾ ಭಟ್ ಹಾಗೂ ಹಾಲಿ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಸಹಕರಿಸಿದರು.








