


ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಜ.19 ರಂದು ಸಂಜೆ, ಒಂದು ಕಾರು ಮತ್ತು ಒಂದು ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ನಿಲ್ಲಿಸಲಾಗಿರುತ್ತದೆ. ಕಾರಿನ ಚಾಲಕನಲ್ಲಿ ವಿಚಾರಿಸುವಾಗ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ(37) ಎಂಬುದಾಗಿ ತಿಳಿಸಿದ್ದು ಆತನ ವರ್ತನೆಯಿಂದ ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 100 ಗ್ರಾಂ ತೂಕವಿರುವ ಗಾಂಜಾ ಗಿಡದ ಎಲೆಗಳಂತೆ ಇದ್ದ ಸೊಪ್ಪು, ಹೂ, ಕಾಯಿ ತುಂಬಿಸಿ ಇದ್ದ ಕಟ್ಟು ಪತ್ತೆಯಾಗಿರುತ್ತದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
ಆ ಬಳಿಕ ಗೂಡ್ಸ್ ವಾಹನದ ಚಾಲಕನ ಬಳಿ ವಿಚಾರಿಸುವಾಗ ಆತನು ಬೆಳ್ತಂಗಡಿ, ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ಆತನ ವಾಹನ ಪರಿಶೀಲಿಸಿದಾಗ ವಾಹನದಲ್ಲಿ 106 ಕಿಲೋ ಗ್ರಾಂ ಮತ್ತು 60 ಗ್ರಾಂ ತೂಕದ ಒಟ್ಟು 73 ಕಟ್ಟು ಗಾಂಜಾ ಪತ್ತೆಯಾಗಿರುವುದು ವರದಿ ಮೂಲಕ ತಿಳಿದು ಬಂದಿದೆ. ಇದರ ಮೌಲ್ಯ ರೂ.53,03,000/- ಆಗಬಹುದು. ಈ ಬಗ್ಗೆ ಚಾಲಕನಲ್ಲಿ ವಿಚಾರಿಸಲಾಗಿ ಗಾಂಜಾ ಸೊಪ್ಪುಗಳನ್ನು ಕೇರಳ ಹಾಗೂ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿರುತ್ತಾನೆ. ಮುಂದಿನ ಕಾನೂನು ಕ್ರಮಕ್ಕಾಗಿ ಗಾಂಜಾವನ್ನು, ಸಾಗಾಣಿಕೆಗೆ ಬಳಸಿದ ವಾಹನಗಳನ್ನು ಹಾಗೂ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್ ಗಳನ್ನು ಸ್ವಾಧೀನಪಡಿಸಿಕೊಂಡು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿರುತ್ತದೆ ಎಂದು ಪ್ರಕಟನೆ ಮೂಲಕ ತಿಳಿಸಲಾಗಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.








