ಬೆಂಗಳೂರು: ನಿನ್ನೆ ಗೆಳೆಯರ ಜೊತೆ ಪಾರ್ಟಿ ಮಾಡಿ ಬಳಿಕ ಮನೆಗೆ ತೆರಳುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆ ಆರ್.ಟಿ.ನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಲೋಕೇಶ್ ಎಂದು ಗುರುತಿಸಲಾಗಿದೆ.
ಲೋಕೇಶ್ ವೃತ್ತಿಯಲ್ಲಿ ಕಾಲ್ಸೆಂಟರ್ ಉದ್ಯೋಗಿಯಾಗಿದ್ದ ಎಂದು ತಿಳಿದು ಬಂದಿದೆ. ನಿನ್ನೆ ಕೆಲಸಕ್ಕೆ ರಜೆ ಹಾಕಿ ಗೆಳೆಯರ ಜೊತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದ. ಬಾರ್ನಲ್ಲಿ ಎಣ್ಣೆ ಪಾರ್ಟಿ ಮಾಡಿ ಬಳಿಕ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ. ಈ ವೇಳೆ ಆರ್.ಟಿ.ನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಪೆಟ್ರೋಲ್ ಹಾಕಿಸಿಕೊಂಡಿದ್ದಾನೆ. ಪೆಟ್ರೋಲ್ ಹಾಕಿಸಿಕೊಂಡು ಮನೆಗೆ ತೆರಳುವಾಗ ದುಷ್ಕರ್ಮಿಗಳ ಗುಂಪೊಂದು ಆತನನ್ನು ಅಡ್ಡಗಟ್ಟಿದೆ.
ಪೆಟ್ರೋಲ್ ಬಂಕ್ನ ನೂರು ಮೀಟರ್ ದೂರದಲ್ಲೇ ಬೈಕ್ ಅಡ್ಡಗಟ್ಟಿ ಲೋಕೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಇರಿದು ಪರಾರಿಯಾಗಿದ್ದಾರೆ. ಐದಾರು ಮಂದಿ ಈ ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಲೋಕೇಶ್ ಸ್ವಲ್ಪ ದೂರ ಓಡಿ ಕುಸಿದು ಬಿದ್ದಿದ್ದಾನೆ. ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.