


ಬೆಂಗಳೂರು: ಸ್ಪ್ರೇ ಸಿಂಪಡಿಸಿ ಮಹಿಳೆಯ ಮಾಂಗಲ್ಯ ಸರವನ್ನು ಕಸಿದುಕೊಂಡು ಕಳ್ಳರು ಪರಾರಿಯಾಗಿರುವ ಘಟನೆ ನೆಲಮಂಗಲ ಸಮೀಪದ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತರನ್ನು ಜ್ಯೋತಿ (45) ಎಂದು ಗುರುತಿಸಲಾಗಿದೆ. ಜ್ಯೋತಿ ಅವರು ಬೆಳಗ್ಗೆ ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್ನಲ್ಲಿ ಬಂದ ಕಳ್ಳರು ಏಕಾಏಕಿ ಅವರ ಮೇಲೆ ಸ್ಪ್ರೇ ಸಿಂಪಡಿಸಿ, ಕೊರಳಲ್ಲಿದ್ದ ಸುಮಾರು 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ.
ಸ್ಪ್ರೇ ಸಿಂಪಡಿಸಿದ ಪರಿಣಾಮ ಜ್ಯೋತಿ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಜ್ಯೋತಿ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ








