


ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿಯ ಗ್ಯಾರೇಜ್ನಿಂದ ವಾಹನಗಳ ಬಿಡಿಭಾಗಗಳನ್ನು ಕಳವುಗೈದ ಪ್ರಕರಣದಲ್ಲಿ ಲಾರಿ ಚಾಲಕನೊಬ್ಬನನ್ನು ಬಂಧಿಸಿ ಕಳುವಾದ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ರಾಜಸ್ಥಾನ ಮೂಲದ ಲಾರಿ ಚಾಲಕ ಮುಖೇಶ್ ದಾಸ್ (46) ಎಂದು ಗುರುತಿಸಲಾಗಿದೆ. ಇವನು ಬೆಂಗಳೂರಿನ ಬನಶಂಕರಿಯ ಶ್ರೀನಿವಾಸ ನಗರದಲ್ಲಿ ವಾಸವಾಗಿದ್ದಾನೆ.ಫೆಬ್ರವರಿ 14 ಮತ್ತು 15ರ ಮಧ್ಯರಾತ್ರಿ ವೇಳೆ ಲಾರಿಯೊಂದರಲ್ಲಿ ಬಂದ ಆರೋಪಿಯು ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಫ್ರೆಂಡ್ಸ್ ಗ್ಯಾರೇಜ್ ಬಳಿ ಲಾರಿಯನ್ನು ನಿಲ್ಲಿಸಿ, ಗ್ಯಾರೇಜ್ನಲ್ಲಿ ದುರಸ್ತಿಗಾಗಿ ನಿಲ್ಲಿಸಿದ್ದ ಎರಡು ಭಾರಿ ವಾಹನಗಳ ಬಿಡಿಭಾಗಗಳನ್ನು ಕಳವು ಮಾಡಿ ಲಾರಿಯಲ್ಲಿ ಸಾಗಿಸಿಕೊಂಡು ಹೋಗಿದ್ದಾನೆ.



ಈ ಬಗ್ಗೆ ಗ್ಯಾರೇಜ್ ಮಾಲೀಕರು ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಶದಿಂದ ಸುಮಾರು ₹96,000 ಮೌಲ್ಯದ ವಾಹನಗಳ ಬಿಡಿಭಾಗಗಳು ಹಾಗೂ ಕೃತ್ಯಕ್ಕೆ ಬಳಸಿದ KA-02-AM-2335 ಸಂಖ್ಯೆಯ ಈಚರ್ ಲಾರಿ ಸೇರಿ ಒಟ್ಟು ₹15,96,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.








