ಅಂತರ್ ರಾಜ್ಯ ಆರೋಪಿಯ ಬಂಧನ





ಬಜಪೆ: ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೇವಸ್ಥಾನದ ಬಾಗಿಲನ್ನು ಮುರಿದು ಒಳನುಗ್ಗಿದ ದುಷ್ಕರ್ಮಿ, 3ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು ರೂ. 25,000/- ಹಣವನ್ನು ಕಳವು ಮಾಡಿದ್ದನು. ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲ್ಪಟ್ಟಿದ್ದು, ಖಚಿತ ಮಾಹಿತಿಯ ಆಧಾರದ ಮೇಲೆ ಮಾರ್ಚ್ 31ರಂದು ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್ (25), ದಿಂಡಿಗುಲ್ ಜಿಲ್ಲೆ, ತಮಿಳುನಾಡು ನಿವಾಸಿಯನ್ನು ಬಂಧಿಸಲಾಗಿದೆ.ವಿಚಾರಣೆಯಲ್ಲಿ ಆರೋಪಿಯು ಕಳವು ಕೃತ್ಯವನ್ನು ಒಪ್ಪಿಕೊಂಡಿದ್ದು, ಕಳವಾಗಿದ್ದ ಕಾಣಿಕೆ ಹುಂಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈತನ ವಿರುದ್ಧ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಕಳವು ಪ್ರಕರಣ ದಾಖಲಾಗಿದ್ದು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತೋಕೂರು-ಜೊಕಟ್ಟೆ ಪ್ರದೇಶದಲ್ಲಿ ನಡೆದ ಪ್ಯಾಷನ್ ಪ್ರೋ ಬೈಕ್ ಕಳವು ಪ್ರಕರಣದಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಆರೋಪಿತನು ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕಳವು ಮಾಡಿ ಮತ್ತೆ ತಮಿಳುನಾಡಿಗೆ ತೆರಳಿ ತಪ್ಪಿಸಿಕೊಳ್ಳುತ್ತಿದ್ದನೆಂದು ತನಿಖೆಯಲ್ಲಿ ತಿಳಿದುಬಂದಿದೆ. ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಶ್ರೀ ಬಾಲಕೃಷ್ಣ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನೂತನ್, ರಾಜೇಶ್ ಮತ್ತು ಪ್ರಕಾಶ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.








