




ತೆಲಂಗಾಣ : ಇಲ್ಲೊಬ್ಬ ಕ್ರೂರಿ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ತನ್ನಿಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ. ಈ ಘಟನೆ ನಡೆದಿರೋದು ತೆಲಂಗಾಣದಲ್ಲಿ.
ಕಚು ಶ್ರೀಶೈಲಂ ಎಂಬಾತ ಕೃತ್ಯ ಎಸಗಿದ ಪಾಪಿ. ಶ್ರೀಶೈಲಂ ಆರು ವರ್ಷಗಳ ಹಿಂದೆ ಮೌನಿಕಾ ಎಂಬಾಕೆಯನ್ನು ಮದುವೆಯಾಗಿದ್ದ. ಇವರಿಗೆ ನಾಲ್ಕು ವರ್ಷಗಳ ಹಿಂದೆ ಗೀತಾಂಶ ಮತ್ತು ಗೀತನ್ನಿಕ ಎಂಬ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗು ಬೇಕೆಂದು ಆಶಿಸಿದ್ದ ಶ್ರೀಶೈಲಂಗೆ ಹೆಣ್ಣು ಮಕ್ಕಳು ಹುಟ್ಟಿದ್ದು ಸುತಾರಾಂ ಇಷ್ಟವಿರಲಿಲ್ಲ. ಇದೇ ವಿಷಯವಾಗಿ ಆತ ಯಾವಾಗಲೂ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.ಅಂದು ಕೂಡ ದಂಪತಿ ನಡುವೆ ಇದೇ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದ್ದು, ಆಕ್ರೋಶಗೊಂಡ ಶ್ರೀಶೈಲಂ ಇಬ್ಬರು ಮಕ್ಕಳನ್ನು ಹೊಲಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಮಕ್ಕಳನ್ನು ಸಮೀಪದ ಬಾವಿಗೆ ಎಸೆದು ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಈ ವಿಷಯ ತಿಳಿದ ಗ್ರಾಮಸ್ಥರು ಆರೋಪಿ ಶ್ರೀಶೈಲಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ . ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.








