




ಬೆಂಗಳೂರು : ಹಣಕ್ಕಾಗಿ ಸಹಪಾಠಿಯನ್ನು ಅಪಹರಿಸಿದ್ದ ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಇಲ್ಲಿನ ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆದಿತ್ಯ ಆರ್.ಭೋಸಲೆ, ಶೌರ್ಯ ಅಗರವಾಲ್, ಸೈಯದ್ ಮೊಹಮ್ಮದ್ ಬಿಲಾಲ್ ಹಾಗೂ ನಿಕುಂಜ್ ಸುಲ್ತಾನಿಯಾ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಚಾಕುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಒಡಿಶಾ ಮೂಲದ ವೃಷಭ್ ಮೊಹಂತಿ ಎಂಬ ವಿದ್ಯಾರ್ಥಿ ಬಿಟಿಎಂ ಲೇಔಟ್ನ ಹಾಸ್ಟೆಲ್ನಲ್ಲಿ ವಾಸವಿದ್ದ. ಹಣಕ್ಕಾಗಿ ಆತನನ್ನು ಅಪಹರಿಸಲು ಆರೋಪಿಗಳು ಸಂಚು ರೂಪಿಸಿದ್ದರು. ಎಪ್ರಿಲ್ 11ರಂದು ರಾತ್ರಿ ಹಾಸ್ಟೆಲ್ ಬಳಿ ಆರೋಪಿಗಳು ವೃಷಬ್ನನ್ನು ಕಾರಿನಲ್ಲಿ ಅಪಹರಿಸಿ ಕರೆದೊಯ್ದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಳಿಕ ಜಯನಗರದ ಮನೆಯೊಂದರಲ್ಲಿ ಕೂಡಿ ಹಾಕಿ, ಸ್ನೇಹಿತರಿಂದ ಹಣ ಕೊಡಿಸುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದರು. ವೃಷಭ್ ಸ್ನೇಹಿತನಿಗೆ ಕರೆ ಮಾಡಿ 50 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಕೂಡಲೇ ಆತನ ಸ್ನೇಹಿತ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದ. ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಮಡಿವಾಳ ಠಾಣೆ ಪೊಲೀಸರು ಮೊಬೈಲ್ ಲೊಕೇಷನ್ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ, ವೃಷಬ್ನನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.







