
ಹೊಸಪೇಟೆ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟು, 21 ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ನಡೆದಿದೆ.ಮೃತರನ್ನು ಕಿತ್ನೂರು ಗ್ರಾಮದ ನಾಗಪ್ಪ (58), ಅವರ ಪುತ್ರ ಕೊಟ್ರೇಶ್ (28), ಸುಜಾತ (34) ಹಾಗೂ ತಿಮ್ಮಲಾಪುರ ಗ್ರಾಮದ ದುರ್ಗಪ್ಪ (55) ಎಂದು ಗುರುತಿಸಲಾಗಿದೆ.


ಇವರು ಬೈಕ್ನಲ್ಲಿ ಗಂಗಾವತಿ ಕಡೆಗೆ ಹುಡುಗಿ ನೋಡಲು ತೆರಳುತ್ತಿದ್ದ ವೇಳೆ ಡಣಾಪುರ ಸಮೀಪ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ನಿಯಂತ್ರಣ ತಪ್ಪಿದ ವಾಹನ ಮೊದಲು ಬೈಕ್ಗೆ ಢಿಕ್ಕಿ ಹೊಡೆದು, ನಂತರ ಕಾರು ಹಾಗೂ ಬಸ್ ಸೇರಿದಂತೆ ಹಲವು ವಾಹನಗಳಿಗೆ ಢಿಕ್ಕಿಯಾಗಿ ಸರಣಿ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.ಅಪಘಾತದ ತೀವ್ರತೆಯಿಂದ ನಾಲ್ವರು ಸ್ಥಳದಲ್ಲೇ ಮರತಪಟ್ಟಿದ್ದು, ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಹೊಸಪೇಟೆ ಹಾಗೂ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ ಅಪಘಾತದ ದೃಶ್ಯ ಅತ್ಯಂತ ಭೀಕರವಾಗಿದ್ದು, ಮೃತದೇಹಗಳು ಚಿದ್ರವಾಗಿದ್ದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದೆ.








