ಮೇ 13ರಂದು ಬಹುಮತ ಸಾಬೀತುಪಡಿಸಬೇಕಿರುವ ವಿಜಯ್ ನೇತೃತ್ವದ ಟಿವಿಕೆ ಸರಕಾರ





ಚೆನ್ನೈ: ತಿರುಪತ್ತೂರು ವಿಧಾನಸಭಾ ಕ್ಷೇತ್ರದಿಂದ ಕೇವಲ ಒಂದು ಮತದಿಂದ ಗೆದ್ದ ಟಿವಿಕೆ ಶಾಸಕ ಆರ್. ಶ್ರೀನಿವಾಸ ಸೇತುಪತಿ ಅವರಿಗೆ 17 ನೇ ವಿಧಾನಸಭೆಯಲ್ಲಿ ವಿಶ್ವಾಸ ಮತ ಹಾಕದಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ನಿರ್ಬಂಧಿಸಿದೆ.
ಎಪ್ರಿಲ್ 23ರ ಚುನಾವಣೆಯಲ್ಲಿ ಟಿವಿಕೆ ಶಾಸಕ ಆರ್. ಶ್ರೀನಿವಾಸ ಸೇತುಪತಿ ವಿರುದ್ಧ ಸೋತ ಡಿಎಂಕೆ ಅಭ್ಯರ್ಥಿ ಕೆ ಆರ್ ಪೆರಿಯಕರುಪ್ಪನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್ ವಿಕ್ಟೋರಿಯಾ ಗೌರಿ ಮತ್ತು ಎನ್ ಸೆಂಥಿಲ್ ಕುಮಾರ್ ಅವರನ್ನೊಳಗೊಂಡ ರಜಾ ಪೀಠವು ಈ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಮೇ 13ರಂದು ತಮಿಳುನಾಡು ವಿಧಾನಸಭೆಯಲ್ಲಿ ಸಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರಕಾರ ಬಹುಮತ ಸಾಬೀತುಪಡಿಸಬೇಕಿದೆ. ಇದಕ್ಕೆ ಮೊದಲೇ ಈ ಬೆಳವಣಿಗೆ ನಡೆದಿದ್ದು, ಮಹತ್ವವನ್ನು ಪಡೆದುಕೊಂಡಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ 108 ಸ್ಥಾನಗಳನ್ನು ಗೆದ್ದಿದ್ದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಳಿಕ ಕಾಂಗ್ರೆಸ್, ವಿಸಿಕೆ, ಐಯುಎಂಎಲ್, ಸಿಪಿಐ ಹಾಗೂ ಸಿಪಿಎಂ ಬೆಂಬಲದೊಂದಿಗೆ ಸಮ್ಮಿಶ್ರ ಸರಕಾರ ರಚಿಸಿದೆ.








