



ಭಟ್ಕಳ : ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ರೌಡಿಶೀಟರ್ಗಳನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಮಾವಳ್ಳಿ–2 ನಿವಾಸಿ ಶೇಖರ ಮಂಜುನಾಥ ನಾಯ್ಕ (25) ಹಾಗೂ ಕೋಣಾರ ಕೆರೆಹಿತ್ತಲ ನಿವಾಸಿ ಮಿಥುನ ಕುಪ್ಪಯ್ಯ ನಾಯ್ಕ (27) ಗಡೀಪಾರುಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.
ಇವರ ವಿರುದ್ಧ ವಿವಿಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ನಿಗಾ ಇರಿಸಿದ್ದರು. ಆದರೂ ಸಮಾಜದ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಚಟುವಟಿಕೆಗಳನ್ನು ಮುಂದುವರಿಸಿದ್ದ ಹಿನ್ನೆಲೆಯಲ್ಲಿ, ಮುರ್ಡೇಶ್ವರ ಪೊಲೀಸರು ಗಡಿಪಾರು ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.
ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಗಳು, ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಮೇ 20ರಂದು ಗಡೀಪಾರು ಆದೇಶ ಹೊರಡಿಸಿದ್ದಾರೆ.
ಆದೇಶದಂತೆ, ಶೇಖರ ನಾಯ್ಕನನ್ನು ತುಮಕೂರು ಜಿಲ್ಲೆಯ ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಮಿಥುನ ನಾಯ್ಕನನ್ನು ವಿಜಯಪುರ ಜಿಲ್ಲೆಯ ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಸ್ಥಳಾಂತರಿಸಲಾಗಿದೆ.
ಮುರ್ಡೇಶ್ವರ ಪೊಲೀಸರು ಇಬ್ಬರನ್ನೂ ಸಂಬಂಧಪಟ್ಟ ಠಾಣಾಧಿಕಾರಿಗಳ ಎದುರು ಹಾಜರುಪಡಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.








