



ಬೆಂಗಳೂರು: ಕಾಂಗ್ರೆಸ್ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರ ಬ್ರೇಕ್ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಗುರುವಾರ ರಾಜೀನಾಮೆ ಬಳಿಕ ಸಂಜೆ ಅಥವಾ ಶುಕ್ರವಾರ ಬೆಳಗ್ಗೆ ಶಾಸಕಾಂಗ ಸಭೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಿಎಂ ಪಟ್ಟ ಒಲಿದು ಬಂದ್ರೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಗುರುವಾರವೇ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ನಿನ್ನೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿತ್ತು. ಅದರಂತೆ ಕೆಲ ಸಚಿವರೊಂದಿಗೆ ಸಿಎಂ ಹಾಗೂ ಒಬ್ಬರೇ ಡಿಸಿಎಂ ದೆಹಲಿಗೆ ಪ್ರಯಾಣಿಸಿದ್ದರು. ಇಂದು ಬೆಳಗ್ಗೆಯಿಂದ ಸಾಯಂಕಾಲದವರೆಗೂ ಸಭೆಗಳನ್ನು ನಡೆಸಲಾಯಿತು. ನಾಯಕತ್ವ ಬದಲಾವಣೆ ಬಗ್ಗೆ ಇಂದೇ ನಿರ್ಧಾರ ಆಗುತ್ತದೆಂದು ಭಾವಿಸಲಾಗಿತ್ತು. ಆದರೆ, ಯಾವುದೇ ಗುಟ್ಟು ಬಿಟ್ಟುಕೊಡದ ಹೈಕಮಾಂಡ್ ನಾಯಕರು ಇಂದು ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ, ಯಾವುದೇ ನಾಯಕತ್ವ ಬದಲಾವಣೆ ಇಲ್ಲ. ರಾಜ್ಯಸಭಾ ಚುನಾವಣೆ ಬಗ್ಗೆಯಷ್ಟೇ ಚರ್ಚೆ ನಡೆಸಲಾಗಿದೆ ಎಂದು ನಾಯಕತ್ವ ಬದಲಾವಣೆ ಊಹಾಪೋಹಕ್ಕೆ ತೆರೆ ಎಳೆದಿತ್ತು.








