




ಗಾಝಿಯಾಬಾದ್: ಉತ್ತರಪ್ರದೇಶದ ಗಾಝಿಯಾಬಾದ್ ನಲ್ಲಿ ಬಕ್ರೀದ್ ಹಬ್ಬದಂದು ನಡೆದ ಸೂರ್ಯ ಚೌಹಾಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಸಾದ್ ನನ್ನು ಪೊಲೀಸರು ಎನ್ಕೌಂಟರ್ ನಲ್ಲಿ ಹತ್ಯೆ ನಡೆಸಿದ್ದಾರೆ.
ಆಸಾದ್ ನಗರದಿಂದ ಪರಾರಿಯಾಗುವ ಮುನ್ನ ಖೋರಾ ಪ್ರದೇಶದಲ್ಲಿ ಸ್ನೇಹಿತನೊಬ್ಬನಿಂದ ಹಣ ಪಡೆಯಲು ಬರಲಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರದೇಶದಲ್ಲಿ ನಿಗಾ ವಹಿಸಿದ್ದರು.
ನಿಗದಿತ ಸ್ಥಳಕ್ಕೆ ಅಸಾದ್ ಮತ್ತೊಬ್ಬ ವ್ಯಕ್ತಿಯೊಂದಿಗೆ ಬೈಕ್ನಲ್ಲಿ ಬಂದಿದ್ದಾನೆ. ಪೊಲೀಸರು ಅವನನ್ನು ತಡೆದು ಪರಿಶೀಲಿಸಲು ಮುಂದಾದಾಗ, ಅಸಾದ್ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಅಸಾದ್ ಗಾಯಗೊಂಡಿದ್ದಾನೆ. ಆತನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ವೇಳೆ ಒಬ್ಬ ಪೊಲೀಸ್ ಕಾನ್ಸ್ಟೆಬಲ್ ಕೂಡ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಆರೋಪಿಗಳು ಬಳಸಿದ್ದ ಬೈಕ್ ಹಾಗೂ ದಾಳಿಗೆ ಬಳಸಲಾಗಿದೆ ಎನ್ನಲಾದ ದೇಶೀಯ ನಿರ್ಮಿತ ಪಿಸ್ತೂಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಸಾದ್ ಜೊತೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆ ಮತ್ತು ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಬಕ್ರೀದ್ ಹಬ್ಬದಂದು ನಡೆದ ಸೂರ್ಯ ಚೌಹಾಣ್ ಹತ್ಯೆ ಪ್ರಕರಣವು ಸ್ಥಳೀಯವಾಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.








