






ನವದೆಹಲಿ: ದೆಹಲಿಯ ಹೌಜ್ ರಾಣಿ ಪ್ರದೇಶದ ಹೋಟೆಲ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ನಡುವೆ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ.
ಅಪಘಾತದಲ್ಲಿ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ದಂಪತಿ ಟಾಯ್ಲೆಟ್ ಒಳಗೆ ಆಶ್ರಯ ಪಡೆದಿದ್ದರು. ಯಾರಾದರೂ ರಕ್ಷಣೆಗೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಅವರು ಅಲ್ಲೇ ಕಾದಿದ್ದರು. ಆದರೆ ಅಗ್ನಿಶಾಮಕ ಸಿಬ್ಬಂದಿ ಅಲ್ಲಿಗೆ ತಲುಪುವಷ್ಟರಲ್ಲಿ ಇಬ್ಬರೂ ಪ್ರಾಣ ಕಳೆದುಕೊಂಡಿದ್ದರು.
ಅಗ್ನಿಶಾಮಕ ಸಿಬ್ಬಂದಿ ಮೊದಲ ಮಹಡಿಯಲ್ಲಿ ಲಾಕ್ ಆಗಿದ್ದ ಟಾಯ್ಲೆಟ್ ಬಾಗಿಲು ಒಡೆದು ಒಳಗೆ ಹೋದಾಗ ಈ ದೃಶ್ಯ ಕಂಡುಬಂದಿದೆ. ಮಹಿಳೆ ಟಾಯ್ಲೆಟ್ ಕಮೋಡ್ ಮೇಲೆ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪುರುಷ ಆಕೆಯ ಪಕ್ಕದಲ್ಲೇ ಕುಳಿತಿದ್ದನು. ಇಬ್ಬರೂ ಪರಸ್ಪರ ಬಿಗಿದಪ್ಪಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಮಹಿಳೆ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಬಂದಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪುರುಷ ಆಕೆಯ ಆರೈಕೆ ಮಾಡುತ್ತಿದ್ದ ವ್ಯಕ್ತಿಯಾಗಿರಬಹುದು ಎನ್ನಲಾಗಿದೆ. ಅಗ್ನಿ ಅವಘಡ ಸಂಭವಿಸಿದ ಕಟ್ಟಡದಲ್ಲಿ ಒಂದೇ ಪ್ರವೇಶ ಹಾಗೂ ನಿರ್ಗಮನ ದ್ವಾರ ಇತ್ತು. ಇದರಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆ ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯಿಂದ ಕಟ್ಟಡ ತುಂಬಾ ಹೊಗೆಯಿಂದ ಆವರಿಸಿತ್ತು. ಹಲವರು ಉಸಿರುಗಟ್ಟಿ ಅಸ್ವಸ್ಥರಾಗಿದ್ದರು. ಕೆಲವರು ಪ್ರಜ್ಞೆ ಕಳೆದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದುರಂತದಲ್ಲಿ 9 ಭಾರತೀಯರು ಹಾಗೂ 12 ವಿದೇಶಿ ಪ್ರಜೆಗಳು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ 8 ಮಂದಿ ಜೀವ ಕಳೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.








