



ವಿಟ್ಲ: ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗದಲ್ಲಿ ನಡೆದಿದೆ.
ಜೂನ್ 14ರ ಸಂಜೆ, ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು.


ದಾಳಿ ವೇಳೆ ಉಳ್ಳಾಲ ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಬಂಟ್ವಾಳ ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ (63) ಹಾಗೂ ವಿಟ್ಲಪಡ್ನೂರು ನಿವಾಸಿ ದಯಾನಂದ (40) ಎಂಬವರನ್ನು ವಶಕ್ಕೆ ಪಡೆಯಲಾಯಿತು.
ಆರೋಪಿಗಳಿಂದ ಜೂಜಾಟಕ್ಕೆ ಬಳಸಲಾಗಿದ್ದ ₹1,550 ನಗದು, ಮೂರು ಅಂಕದ ಕೋಳಿಗಳು ಹಾಗೂ ಇತರೆ ಸಂಬಂಧಿತ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 129/2026 ದಾಖಲಿಸಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 87 ಮತ್ತು 93, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ 1960ರ ಕಲಂ 3 ಮತ್ತು 11 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 112ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.








