
ಮಂಗಳೂರು: ನಗರದ ಸೂಟರ್ಪೇಟೆಯ ಗ್ರಾಮಲೆಕ್ಕಾಧಿಕಾರಿ ಕಚೇರಿ ಬಳಿ ಜೂ.14ರಂದು ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆಗೈದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪಾಂಡೇಶ್ವರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು ಓರ್ವ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾದ ಬಗ್ಗೆ ವರದಿಯಾಗಿದೆ.
ಉತ್ತರ ಪ್ರದೇಶದ ಗೋರಖ್ಪುರ್ ನಿವಾಸಿಗಳಾದ ರವಿ ಬರ್ವ, ಸಾಹಿಲ್, ಬಾಗಲಕೋಟೆಯ ಅಲ್ತಾಫ್ ಹುಸೇನ್ ಎಂಬವರನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಆ ಪೈಕಿ ಅಲ್ತಾಫ್ ಹುಸೇನ್ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಈ ಆರೋಪಿಗಳು ನಗರದ ಬಸ್ ನಿಲ್ದಾಣದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಶುಕ್ರವಾರ ಬೆಳಗ್ಗೆ ಸುಮಾರು 7:30ಕ್ಕೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದರು. ಹಾಗೇ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸರು ಠಾಣೆಗೆ ಕರೆ ತರುವ ವೇಳೆ ಅಲ್ತಾಫ್ ಹುಸೇನ್ ಪೊಲೀಸರ ಕಣ್ಣಪ್ಪಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ತಕ್ಷಣ ಪೊಲೀಸರು ಹುಡುಕಾಡ ನಡೆಸಿದರೂ ಈವರೆಗೆ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.ಜೂ.14ರಂದು 64ರ ಹರೆಯದ ಪ್ರಭಾವತಿ ಎಂಬಾಕೆ ಪೂಜೆ ನಿಮಿತ್ತ ಸೂಟರ್ ಪೇಟೆಗೆ ಹೋಗಲು ಎಕ್ಕೂರಿನಲ್ಲಿ ಬಸ್ಸಿನಿಂದ ಇಳಿದು ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿತ್ತು.
ಆರೋಪಿಗಳು ಪ್ರಭಾವತಿಯ ಕುತ್ತಿಗೆ ಯಲ್ಲಿದ್ದ ಸುಮಾರು 1.50 ಲಕ್ಷ ರೂ. ಮೌಲ್ಯದ 12 ಗ್ರಾಂ ತೂಕದ ಸರವನ್ನು ಕಸಿದು ಪರಾರಿಯಾಗಿದ್ದರು. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.








