
ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ.ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ (43) ಎಂದು ಗುರುತಿಸಲಾಗಿದೆ.ಗೋವಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಾರಿನಲ್ಲಿ ಐವರು ಉಡುಪಿಗೆ ಹಿಂದಿರುಗುತ್ತಿದ್ದರು.
ಈ ವೇಳೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಗದೂತ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬಸ್ಸಿಗೆ ಢಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಂಜುನಾಥ್ ಕರಾವಳಿಯ ಖ್ಯಾತ ಹುಲಿ ವೇಷದ ಕಲಾವಿದರಾಗಿದ್ದು, ಹಲವು ವರ್ಷಗಳಿಂದ ಹುಲಿ ವೇಷಧಾರಿಗಳಿಗೆ ಆಕರ್ಷಕ ಪೈಂಟಿಂಗ್ ಮಾಡುವ ಮೂಲಕ ಗುರುತಿಸಿಕೊಂಡಿದ್ದರು.ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.








