


ಚಿಕ್ಕಬಳ್ಳಾಪುರ: ಅಕ್ಕ-ತಂಗಿಯರನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ.
25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ ಮಹಿಳೆಯರು. ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ತಿಳಿದುಬಂದಿದೆ.
ಮೃತ ಶಮಾ ಅವರ ಪತಿ ಏಜಾಜ್ ಮೇಲೆಯೇ ಕೊಲೆ ಶಂಕೆ ವ್ಯಕ್ತವಾಗಿದೆ. ಪತ್ನಿ ಹಾಗೂ ನಾದಿನಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಶಂಕೆ ಇದ್ದು, ಘಟನೆ ಬಳಿಕ ಮೂವರು ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.
ಗಾಂಜಾ ಮತ್ತಿನಲ್ಲೇ ಈ ಕೃತ್ಯ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಚಿಂತಾಮಣಿ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದ್ದು, ಪೊಲೀಸರು ಇದನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ನಗರ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದು, ಕೊಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ








