



ಟೆಹ್ರಾನ್: ಹಾರ್ಮುಜ್ ಜಲಸಂಧಿಯ ಓಮನ್ ಕರಾವಳಿಯಲ್ಲಿ ʻಜೆಎಫ್ಎಸ್ ಗ್ಯಾಲಕ್ಸಿʼ ಎಂಬ ವಾಣಿಜ್ಯ ಹಡಗಿನ ಮೇಲೆ ಇರಾನ್ ದಾಳಿ ನಡೆಸಿದ್ದು, ಓರ್ವ ಭಾರತೀಯ ನಾಪತ್ತೆಯಾಗಿದ್ದಾರೆ. 10 ಜನರನ್ನು ರಕ್ಷಿಸಲಾಗಿದೆ. ವಾಣಿಜ್ಯ ಹಡಗಿನ ಮೇಲಿನ ಈ ದಾಳಿಯನ್ನು ಭಾರತ ಖಂಡಿಸಿದ್ದು, ಈ ಕುರಿತು ಎಕ್ಸ್ ಖಾತೆಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪೋಸ್ಟ್ ಹಂಚಿಕೊಂಡಿದ್ದಾರೆ.
ʻಇಂದು ಮುಂಜಾನೆ ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗು ಜಿಎಫ್ಎಸ್ ಗ್ಯಾಲಕ್ಸಿಯ ಮೇಲೆ ನಡೆದಿರುವ ದಾಳಿಯನ್ನು ನಾವು ಖಂಡಿಸುತ್ತೇವೆ. ಹಡಗಿನಲ್ಲಿದ್ದ 11 ಭಾರತೀಯ ಪ್ರಜೆಗಳಲ್ಲಿ ಇಲ್ಲಿಯವರೆಗೆ 10 ಜನರನ್ನು ರಕ್ಷಿಸಲಾಗಿದೆ. ಆದರೆ ಓರ್ವ ಭಾರತೀಯ ಪ್ರಜೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸಚಿವಾಲಯವು ಓಮನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಓಮನ್ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ನಡೆಸುತ್ತಿದೆ. ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ. ಒಮನ್ ಅಧಿಕಾರಿಗಳ ಬೆಂಬಲಕ್ಕಾಗಿ ನಾವು ಅವರಿಗೆ ಧನ್ಯವಾದ ಹೇಳುತ್ತೇವೆ ಎಂದು ಪೋಸ್ಟ್ನಲ್ಲಿ ಹಂಚಿಕೊಂಡಿದ್ದಾರೆ.
ವಾಣಿಜ್ಯ ಹಡಗಿನ ಮೇಲಿನ ದಾಳಿಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಾ, ಉದ್ವಿಗ್ನತೆಯ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡುವಂತೆ ಸಚಿವಾಲಯ ಮನವಿ ಮಾಡಿದೆ. ಈ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳು ತೀವ್ರ ಕಳವಳಕಾರಿಯಾಗಿದ್ದು, ಉದ್ವಿಗ್ನತೆಯ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡಬೇಕು. ಶಾಂತಿ ಮತ್ತು ಸ್ಥಿರತೆಗೆ ಮರಳಲು ರಾಜತಾಂತ್ರಿಕ ಪರಿಹಾರಕ್ಕಾಗಿ ನಡೆಯುತ್ತಿರುವ ಮಾತುಕತೆಗಳನ್ನು ಶೀಘ್ರವೇ ಮುಕ್ತಾಯಗೊಳಿಸಬೇಕು ಎಂದು ಕರೆ ನೀಡಿದೆ.








