



ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಈ ಅಕ್ರಮ ವಲಸಿಗರನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮೊಯಿದ್ದೀನ್ ಇಸ್ಲಾಂ , ದಿಲ್ವಾರ್ ಹುಸೇನ್, ರಸೂಲ್ ಇಸ್ಲಾಂ ಬಂಧಿತರು: ಬಂಧಿತ ಆರೋಪಿಗಳೆಲ್ಲರೂ ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ. ಇವರು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕೆಲಸಕ್ಕಾಗಿ ಕರೆತರುತ್ತಿದ್ದರು. ಇದೇ ನೆಪದಲ್ಲಿ ಭಾರತೀಯ ಕಾರ್ಮಿಕರ ಜೊತೆಯಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಸಹ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಮಂಗಳೂರಿಗೆ ಕರೆತಂದು ಕಟ್ಟಡ ನಿರ್ಮಾಣದ ಕೆಲಸಕ್ಕೆ ಸೇರಿಸುತ್ತಿದ್ದರು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ.
ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬನ ಬಂಧನ: ಪ್ರಕರಣದ ಗಾಂಭೀರ್ಯವನ್ನು ಅರಿತು ಕಾರ್ಯಾಚರಣೆಗೆ ಇಳಿದ ಮಂಗಳೂರು ಪೊಲೀಸರು, ಆರೋಪಿಗಳಾದ ಮೊಯಿದ್ದೀನ್ ಇಸ್ಲಾಂ ಮತ್ತು ದಿಲ್ವಾರ್ ಹುಸೇನ್ನನ್ನು ಮಂಗಳೂರಿನಲ್ಲಿಯೇ ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿ ರಸೂಲ್ ಇಸ್ಲಾಂ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ವಿಶೇಷ ಸಮನ್ವಯತೆ ಸಾಧಿಸಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಡಿಸಿಪಿ ಅವರ ಕ್ಷಿಪ್ರ ಕಾರ್ಯಾಚರಣೆಯ ಫಲವಾಗಿ ಆರೋಪಿ ರಸೂಲ್ ಇಸ್ಲಾಂನನ್ನು ಕೋಲ್ಕತ್ತಾದಲ್ಲಿ ಬಂಧಿಸಲಾಗಿದೆ.
ಕೋಲ್ಕತ್ತಾದಲ್ಲಿ ವಶಕ್ಕೆ ಪಡೆಯಲಾಗಿರುವ ಆರೋಪಿ ರಸೂಲ್ ಇಸ್ಲಾಂನನ್ನು ಟ್ರಾನ್ಸಿಟ್ ವಾರಂಟ್ ಮುಖಾಂತರ ಮಂಗಳೂರಿಗೆ ಕರೆತರಲು ಮಂಗಳೂರು ನಗರ ಪೊಲೀಸರ ವಿಶೇಷ ತಂಡ ಈಗಾಗಲೇ ಪಶ್ಚಿಮ ಬಂಗಾಳಕ್ಕೆ ರವಾನೆಯಾಗಿದೆ. ಆರೋಪಿಯನ್ನು ಮಂಗಳೂರಿಗೆ ಕರೆತಂದು ತೀವ್ರ ವಿಚಾರಣೆಗೆ ಒಳಪಡಿಸಿದ ಬಳಿಕ, ಈ ಅಂತಾರಾಷ್ಟ್ರೀಯ ಅಕ್ರಮ ವಲಸೆ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ? ಹಾಗೂ ಕರಾವಳಿ ಭಾಗದಲ್ಲಿ ಇನ್ನುಳಿದ ಎಲ್ಲೆಲ್ಲಿ ಇಂತಹ ವಲಸಿಗರನ್ನು ನಿಯೋಜಿಸಲಾಗಿದೆ ಎಂಬ ಸಂಪೂರ್ಣ ಸತ್ಯ ಹೊರಬರಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.








